ಕಾರ್ಗಲ್: ಲೇಖಕರಿಗೆ ಸಾಮಾಜಿಕ ಕಳಕಳಿ ಮತ್ತು ಸ್ಥಿತಿಗತಿಗಳ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಲೇಖಕ ಜನಸಾಮಾನ್ಯರನ್ನು ತಲುಪಲು ಸಾಧ್ಯ ಎಂದು ಸಾಹಿತಿ ನಾ.ಡಿಸೋಜಾ ಅಭಿಪ್ರಾಯಪಟ್ಟರು.
ಜೋಗದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಚಿಂತನಾ ಸಮಾವೇಶದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಶ್ರೀಪತಿ ಹಳಗುಂದ ಅವರ ಮಣ್ಣು ಮತ್ತು ಮನಸ್ಸು ಪುಸ್ತಕದ ಮುನ್ನುಡಿಯಲ್ಲಿ, ಪುಸ್ತಕದ ಒಳಗೇನಿದೆ ಎಂಬುದು ವ್ಯಕ್ತವಾಗಿದೆ. ಮಕ್ಕಳ ಸಾಹಿತ್ಯದ ಬಗ್ಗೆ ನಿರ್ಲಕ್ಷ್ಯ ಮಾಡದೇ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಮಹಾಬಲೇಶ್ವರ್ ಭಟ್, ಜಿಲ್ಲೆಯಲ್ಲಿ ಸಾಹಿತಿಗಳು ಬೆಳೆಯಲು ಪರಿಷತ್ತುಗಳು ಕಾರಣ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಂಡಿದೆ ಎಂದರು.
ಇದೇ ವೇಳೆ ಸಾಹಿತಿ ನಾ.ಡಿಸೋಜಾ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎನ್. ಹರಿಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಸಾ ನಂಜುಂಡಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಲಕ್ಷ್ಮೀ ಮಹೇಶ್ ಮತ್ತು ಶಾಂತಾ ಆನಂದ್ ಪ್ರಾರ್ಥಿಸಿದರು. ಪ್ರೊ.ಮಾರ್ಷಲ್ ಶರಾಂ ಪ್ರಾಸ್ತಾವಿಕ ಮಾತನಾಡಿದರು. ವಿ.ಟಿ. ಸ್ವಾಮಿ ಸ್ವಾಗತಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.