ಬೆಂಗಳೂರು: ಭೈರಸಂದ್ರ ವಾರ್ಡ್ನ ಪಾಲಿಕೆ ಸದಸ್ಯ ಎಸ್. ನಾಗರಾಜ್ ಅವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಯುವ ಕಾಂಗ್ರೆಸ್ನ ಕಾರ್ಯಕರ್ತರು ಜಯನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪಕ್ಷದ ಮುಖಂಡ ಎಂ.ರಾಮಚಂದ್ರಪ್ಪ ಮಾತನಾಡಿ, `ಬಿಜೆಪಿ ಮಾಜಿ ಸಚಿವರು ವಿಧಾನ ಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದರೆ, ಬಿಬಿಎಂಪಿ ಸದಸ್ಯರಾದ ಎಸ್. ನಾಗರಾಜ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಜಾತಿ ನಿಂದನೆ ಮಾಡಿದ್ದಾರೆ. ಇಂತಹ ಪ್ರಕರಣಗಳು ಪಕ್ಷದಲ್ಲಿ ನಿರಂತರವಾಗಿ ನಡೆಯುತ್ತಿವೆ ಎಂದರು.
ಘಟನೆ ಸಂಬಂಧ ಈಗಾಗಲೇ ಮಹಿಳೆಯ ತಂದೆ ನಾಗರಾಜ್ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೇ ಆರೋಪಿಯ ಸಹಚರರು ಮಹಿಳೆಯ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕುತ್ತಿರುವುದರಿಂದ ಅವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಹಾಗೂ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.