ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಎಂ.ಟಿ.ರೇಜು ಅವರಿಗೆ ಸೋಮವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು.
ಕರ್ನಾಟಕ ಉಸ್ತುವಾರಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್, ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಜತೆಗಿದ್ದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಹೆಗ್ಡೆ, `ಉಪ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಒಗ್ಗಟ್ಟಿನಿಂದ ದುಡಿಯುವ ಮೂಲಕ ಕಾಂಗ್ರೆಸ್ ಇಲ್ಲಿ ಗೆಲುವು ಸಾಧಿಸಲಿದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿ.ಪರಮೇಶ್ವರ್, `ರಾಜ್ಯದ ಜ್ವಲಂತ ಸಮಸ್ಯೆಗಳು, ಭ್ರಷ್ಟಾಚಾರ ವಿಚಾರವನ್ನು ಜನರ ಮುಂದಿಟ್ಟು ಮತ ಕೇಳಲಾಗುವುದು~ ಎಂದರು.
ಮುನಿಯಪ್ಪ ನಿರ್ಗಮನ: ಜಯಪ್ರಕಾಶ್ ಹೆಗ್ಡೆ ಸೇರಿದಂತೆ 6 ಮಂದಿ ನಾಮಪತ್ರ ಸಲ್ಲಿಕೆ ವೇಳೆ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಿದ್ದರು. ಆದರೆ, `ಅಭ್ಯರ್ಥಿ ಸೇರಿದಂತೆ ಐವರಿಗೆ ಮಾತ್ರ ಅವಕಾಶ~ ಎಂದು ಎಂ.ಟಿ.ರೇಜು ನಿಯಮದ ಪುಸ್ತಕ ತೋರಿಸಿದರು. ಪರಿಣಾಮ ಅಭ್ಯರ್ಥಿ ಜತೆಗಿದ್ದ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ನಿರ್ಗಮಿಸಿದರು.