ಕುಶಾಲನಗರ: ಮುಂಬರುವ ಕೊಡಗು– ಮೈಸೂರು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಗೆಲ್ಲಿಸಲು ಶ್ರಮಿಸುವುದಾಗಿ ಈ ಕ್ಷೇತ್ರದ ಶಕ್ತಿ ಕೇಂದ್ರದ ಕಾರ್ಯಕರ್ತರು ಒಕ್ಕೊರಲಿನಿಂದ ಘೋಷಿಸಿದರು.
ಇಲ್ಲಿನ ರೈತ ಭವನದಲ್ಲಿ ಬುಧವಾರ ನಡೆದ ಕೊಡಗು–ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡರ ಮಾತಿಗೆ ಸಮ್ಮತಿ ಎನ್ನುವಂತೆ ಕಾರ್ಯಕರ್ತರು ಒಪ್ಪಿಗೆ ಸೂಚಿಸಿದರು.
ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ದೇಶದೆಲ್ಲೆಡೆ ಜನರು ಬದಲಾವಣೆ ಬಯಸುತ್ತಿದ್ದಾರೆ. ಅವರಿಗೆ ಸ್ಪಂದಿಸುವ ಕೆಲಸವನ್ನು ನಾವು (ಬಿಜೆಪಿ) ಮಾಡಬೇಕಾಗಿದೆ ಎಂದರು.
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪಕ್ಷವನ್ನು ಗೆಲ್ಲಿಸಿಕೊಡಲು ಕಾರ್ಯಕರ್ತರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕು ಎಂದರು. ಮಾಜಿ ಸಚಿವ ವಿಜಯ ಶಂಕರ್, ಮಾಜಿ ಸಚಿವ ಎಸ್.ಎ. ರಾಮದಾಸ್ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಜಾ ಕುಶಾಲಪ್ಪ ವಂದಿಸಿದರು.
ಕೊಡಗು ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳನ್ನು ಅನುಷ್ಠಾನ ಗೊಳಿಸಬಾರದು ಎನ್ನುವ ಸಭೆಯ ನಿರ್ಣಯವನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನು ಮುತ್ತಪ್ಪ ಮಂಡಿಸಿದರು. ಇದಕ್ಕೆ ಕಾರ್ಯಕರ್ತರು ಒಕ್ಕೊರಲಿನಿಂದ ಸಮ್ಮತಿ ಸೂಚಿಸಿದರು.