ಬೆಂಗಳೂರು: ಹಲವು ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ಕೊನೆಗೂ ರಾಜ್ಯ ಸರ್ಕಾರ ಚಾಲನೆ ನೀಡಿದೆ.
ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಈ ಹುದ್ದೆಗೆ ಸೂಕ್ತ ವ್ಯಕ್ತಿಯ ಹೆಸರು ಸೂಚಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮ್ಜಿತ್ ಸೇನ್ ಸೇರಿದಂತೆ ಪ್ರತಿಪಕ್ಷಗಳ ನಾಯಕರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.
ಸ್ಪೀಕರ್ ಕೆ.ಜಿ.ಬೋಪಯ್ಯ, ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕಿ ಮೋಟಮ್ಮ ಅವರಿಗೆ ಪತ್ರ ಬರೆಯಲಾಗಿದೆ.
ಮುಖ್ಯಮಂತ್ರಿಯವರ ಪತ್ರದಲ್ಲಿ ಎನ್.ಕೆ.ಸೋಧಿ ಸೇರಿದಂತೆ ನಾಲ್ಕು ಮಂದಿಯ ಹೆಸರುಗಳನ್ನು ಉಲ್ಲೇಖಿಸಿದ್ದು, ಅವರಲ್ಲಿ ಒಬ್ಬರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿ ಮಾ.3ರೊಳಗೆ ಪತ್ರಮೂಲಕ ತಿಳಿಸುವಂತೆ ಕೋರಲಾಗಿದೆ.ಈ ಶಿಫಾರಸು ಪತ್ರಗಳನ್ನು ನೋಡಿಕೊಂಡು ಮುಖ್ಯಮಂತ್ರಿಯವರು ಸೂಕ್ತ ವ್ಯಕ್ತಿಯನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡಲಿದ್ದಾರೆ ಎಂದು ಗೊತ್ತಾಗಿದೆ.