ಬೆಂಗಳೂರು: ಲೋಕಾಯುಕ್ತ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಆಯ್ಕೆ ಸಂಬಂಧ ವಿರೋಧ ಪಕ್ಷದ ನಾಯಕರು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಕೂಡಲೇ ಪತ್ರ ರವಾನಿಸುವುದಾಗಿ ಸಿಎಂ ಸದಾನಂದ ಗೌಡ ತಿಳಿಸಿದರು.
ಗೃಹ ಕಚೇರಿ `ಕೃಷ್ಣಾ~ದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಲೋಕಾಯುಕ್ತರ ನೇಮಕ ಸಂಬಂಧ ಎಲ್ಲ ಅಗತ್ಯ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು. ಈ ವಿಚಾರದಲ್ಲಿ ನನ್ನ ಮೇಲೆ ಯಾವುದೇ ಒತ್ತಡ ಇಲ್ಲ~ ಎಂದು ಸ್ಪಷ್ಟಪಡಿಸಿದರು.
`ಉಪ ಲೋಕಾಯುಕ್ತ ಸ್ಥಾನಕ್ಕೆ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರನ್ನು ನೇಮಕ ಮಾಡುವ ಸಂದರ್ಭದಲ್ಲೂ ಅಗತ್ಯವಿದ್ದ ಎಲ್ಲ ಶಿಷ್ಟಾಚಾರಗಳನ್ನು ಪಾಲಿಸಲಾಗಿದೆ. ಈ ವಿಚಾರ ಈಗ ನ್ಯಾಯಾಲಯದ ಮೆಟ್ಟಿಲೇರಿರುವ ಕಾರಣ ಹೆಚ್ಚಿನ ಪ್ರತಿಕ್ರಿಯೆ ನೀಡಲಾರೆ~ ಎಂದರು. `ಶೀಘ್ರ ಸಂಪುಟ ವಿಸ್ತರಣೆ ನಡೆಸಿ ಹೊರೆಯನ್ನು ಕಡಿಮೆ ಮಾಡಿಕೊಳ್ಳುತ್ತೇನೆ~ ಎಂದರು.