ಶಿವಮೊಗ್ಗ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು 59ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅಕ್ಟೋಬರ್ 1ರಿಂದ 7ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದೆ.
1ರಂದು ಬೆಳಿಗ್ಗೆ 9ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ನಡಿಗೆ ಜಾಥಾ ಹಾಗೂ ಬೈಸಿಕಲ್ ಜಾಥಾ ಉದ್ಘಾಟನಾ ಸಮಾರಂಭ. ಅಂದು ಮಧ್ಯಾಹ್ನ 3ಗಂಟೆಗೆ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ 'ಅರಣ್ಯ, ವನ್ಯಜೀವಿ ಮತ್ತು ಪರಿಸರ'ಕ್ಕೆ ಸಂಬಂಧಿಸಿದಂತೆ 'ಆಶುಭಾಷಣ ಸ್ಪರ್ಧೆ’ಯನ್ನು ಏರ್ಪಡಿಸಲಾಗಿದೆ.
2ರಂದು ಬೆಳಿಗ್ಗೆ 10ಗಂಟೆಯಿಂದ ನಗರದ ಗಾಂಧಿಪಾರ್ಕ್ನಲ್ಲಿ ವನ್ಯಜೀವಿ ಹಾಗೂ ಪರಿಸರಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯು ಪೂರ್ವ ಪ್ರಾಥಮಿಕ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ 4ಹಂತದಲ್ಲಿ ನಡೆಯಲಿದೆ. ಅಂದು ಮಧ್ಯಾಹ್ನ 3ಗಂಟೆಯಿಂದ ಕಸ್ತೂರಬಾ ಕಾಲೇಜಿನ ಸಭಾಂಗಣದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 'ವನ್ಯಜೀವಿ ಸಂರಕ್ಷಣೆಯಲ್ಲಿ ನಮ್ಮ ಪಾತ್ರ' ಎಂಬ ವಿಷಯದ ಕುರಿತು, ಕಾಲೇಜು ವಿದ್ಯಾರ್ಥಿಗಳಿಗಾಗಿ 'ಪಶ್ಚಿಮ ಘಟ್ಟಗಳ ಜೀವ ವೈವಿಧ್ಯತೆ' ಎಂಬ ವಿಷಯದ ಕುರಿತು ಹಾಗೂ ಸಾರ್ವಜನಿಕರಿಗಾಗಿ 'ಪರಿಸರ ಸಮತೋಲನದಲ್ಲಿ ನಾಗರಕರ ಪಾತ್ರ' ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ.
3ರಂದು ಬೆಳಿಗ್ಗೆ 10ಗಂಟೆಯಿಂದ ಕಮಲಾ ನೆಹರೂ ಕಾಲೇಜಿನಲ್ಲಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ 'ಅರಣ್ಯ, ವನ್ಯಜೀವಿ ಹಾಗೂ ಪರಿಸರ ನಿರ್ವಹಣೆ' ಎಂಬ ವಿಷಯದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಮಧ್ಯಾಹ್ನ 3ಗಂಟೆಯಿಂದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ 'ಮೃಗಾಲಯ ಮತ್ತು ಸಫಾರಿಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರ' ಅಥವಾ 'ಪರಿಸರ ಸಂರಕ್ಷಣೆಯಲ್ಲಿ ಪರಿಸರ ಪ್ರವಾಸೋದ್ಯಮದ ಪಾತ್ರ' ಎಂಬ ವಿಷಯದ ಕುರಿತು ಹಾಗೂ ಸಾರ್ವಜನಿಕರಿಗಾಗಿ 'ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿಗಳ ರಕ್ಷಣೆ' ಎಂಬ ವಿಷಯದ ಕುರಿತು ಭಾಷಣ ಸ್ಫರ್ಧೆ ನಡೆಯಲಿದೆ.
7ರಂದು ಬೆಳಿಗ್ಗೆ 10ಗಂಟೆಯಿಂದ ಸಕ್ರೆಬೈಲಿನ ಆನೆ ಬಿಡಾರದ ಆವರಣದಲ್ಲಿ ಆನೆಗಳ ದಿನಾಚರಣೆಯನ್ನು ಏರ್ಪಡಿಸಲಾಗಿದೆ. ಅಂದು ಸಂಜೆ ನಗರದ ನೆಹರೂ ಕ್ರೀಡಾಂಗಣದಲ್ಲಿ ವನ್ಯಜೀವಿ ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ: 08182-222983 ಅಥವಾ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.