ಕುಷ್ಟಗಿ: ತಾಲ್ಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ಚೆನ್ನಮ್ಮ ಮತ್ತು ಕಸ್ತೂರಬಾ ಸರ್ಕಾರಿ ವಸತಿ ಶಾಲೆಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಆರನೇ ತರಗತಿಗೆ ಪ್ರವೇಶ ನೀಡುವುದಕ್ಕಾಗಿ ಪಟ್ಟಣದಲ್ಲಿ ಭಾನುವಾರ ಪ್ರವೇಶ ಪರೀಕ್ಷೆ ಪಕ್ರಿಯೆ ಸುಗಮವಾಗಿ ನಡೆಯಿತು.
ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಕ್ರೈಸ್ಟ್ ದ ಕಿಂಗ್ ಶಾಲೆಯಲ್ಲಿ ತೆರೆಯಲಾಗಿದ್ದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿದ್ದ 516 ವಿದ್ಯಾರ್ಥಿಗಳು ಮತ್ತು 363 ವಿದ್ಯಾರ್ಥಿನಿಯರು ಸೇರಿ 879 ಜನ ಉತ್ತರ ಬರೆದರು.ಗಂಗಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಮತ್ತು ಬಿ.ಸಿ.ಎಂ. ಇಲಾಖೆ ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕರನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿತ್ತು.
ಪರೀಕ್ಷೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ನೋಡಲ್ ಅಧಿಕಾರಿಯಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜಿ.ಸಜ್ಜನರ್, ಜಿಲ್ಲಾ ವ್ಯವಸ್ಥಾಪಕ ವೆಂಕಟಪ್ಪ, ಬಿ.ಸಿ.ಎಂ ಇಲಾಖೆ ವಿಸ್ತರಣಾಧಿಕಾರಿ ಬಸವರಾಜ ಕೊಳ್ಳಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು.
ಶಿಕ್ಷಣ ಇಲಾಖೆ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಪರೀಕ್ಷೆಯನ್ನು ನಡೆಸಲಾಗಿದೆ. ಸದರಿ ಇಲಾಖೆಗಳೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸುತ್ತವೆ ಎಂದು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ಕೊಪ್ಪಳ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕ ಉಮೇಶ್ ಪೂಜಾರ ವಿವರ ನೀಡಿದರು. ಎಲ್ಲ ಮಕ್ಕಳಿಗೂ ಏಕರೂಪದ ಪ್ರಶ್ನೆಪತ್ರಿಕೆಗಳನ್ನು ವಿತರಿಸಲಾಗಿತ್ತು, ಅರ್ಹತೆ ಆಧಾರದ ಮೇಲೆ ವಸತಿ ಶಾಲೆಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಅವರು ಹೇಳಿದರು.