ಬಾಗಲಕೋಟೆ: ಸಂಕಷ್ಟದಲ್ಲಿರುವ ನೇಕಾರರ ಹಿತ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ `ವಸ್ತ್ರ ಬ್ಯಾಂಕ್~ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ಮಂಗಳವಾರ ಇಲ್ಲಿ ಆಗ್ರಹಿಸಿದರು.
ರಾಜ್ಯದ ನೇಕಾರರು ತಯಾರಿಸುವ ವಸ್ತ್ರಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಆವರ್ತನಿಧಿ ಮೀಸಲಿಡಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ರಾಜ್ಯದಲ್ಲಿ 55 ಲಕ್ಷ ನೇಕಾರರಿದ್ದರೂ ಜನಸಂಖ್ಯೆಗೆ ಅನುಗುಣವಾಗಿ ಇದುವರೆಗೂ ಸರಿಯಾದ ರಾಜಕೀಯವಾಗಿ ಪ್ರಾತಿನಿಧ್ಯ ದೊರೆತಿಲ್ಲ. ನೇಕಾರ ಸಮುದಾಯದ ಸಂಘಟನೆ ಉದ್ದೇಶದಿಂದ ಮತ್ತು ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳುವ ಉದ್ದೇಶದಿಂದ ಶೀಘ್ರದಲ್ಲೇ ನೇಕಾರ ಸಮುದಾಯದ ಮಹಾ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗುವುದು ಎಂದು ತಿಳಿಸಿದರು.