ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹಿರಿಯ ಪುತ್ರ ಎಚ್.ಡಿ.ಬಾಲಕೃಷ್ಣೇಗೌಡ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಜನವರಿ 5ಕ್ಕೆ ಮುಂದೂಡಿದೆ.
ಕೆಎಎಸ್ ಅಧಿಕಾರಿಯಾಗಿದ್ದ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಆರೋಪ ಎದುರಿಸುತ್ತಿರುವ ಬಾಲಕೃಷ್ಣೇಗೌಡ, ಹಿಂದಿನ ಎರಡು ಸಂದರ್ಭಗಳಲ್ಲಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಬುಧವಾರವೂ ವಿಚಾರಣೆ ಆರಂಭವಾದಾಗ ಅವರು ನ್ಯಾಯಾಲಯದಲ್ಲಿ ಹಾಜರಿರಲಿಲ್ಲ. ಆರೋಪಿಯ ಗೈರು ಹಾಜರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಬಾಲಕೃಷ್ಣೇಗೌಡರ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿಗೆ ಆದೇಶಿಸಿದರು.
ನಂತರ ತರಾತುರಿಯಲ್ಲಿ ನ್ಯಾಯಾಲಯಕ್ಕೆ ಬಂದ ಬಾಲಕೃಷ್ಣೇಗೌಡರು, ಜಾಮೀನುರಹಿತ ವಾರೆಂಟ್ ಜಾರಿ ಆದೇಶ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು. ಅವರ ಕೋರಿಕೆಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ಜ.5ಕ್ಕೆ ವಿಚಾರಣೆ ಮುಂದೂಡಿದರು.