ಕೆಂಗೇರಿ: ನಗರದ ಸುಂಕದಕಟ್ಟೆಯ ಚಂದನ ಬಡವಾಣೆಯ ವಿದ್ಯಾರ್ಥಿ ನಿಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎರಡು ದಿನಗಳಿಂದ ಉಪವಾಸ ನಡೆಸುತ್ತ್ದ್ದಿದಾರೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಿದ್ಯಾರ್ಥಿ ನಿಲಯವನ್ನು ಎರಡು ತಿಂಗಳ ಹಿಂದೆಯಷ್ಟೇ ಯಲಹಂಕ ಬಳಿಯ ಎಂ.ಎಸ್.ಪಾಳ್ಯದಿಂದ ಚಂದನ ಬಡಾವಣೆಗೆ ವರ್ಗಾಯಿಸಲಾಗಿದೆ. ಆದರೆ, ಇಲ್ಲಿ ಅಗತ್ಯ ಮೂಲಸೌಕರ್ಯಗಳಿಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ಖಾಸಗಿ ಟ್ಯಾಂಕರ್ ಮೂಲಕ ತಂದು ಕೊಳಾಯಿ ನೀರನ್ನು ಪೂರೈಸಲಾಗುತ್ತಿದೆ. ಇದರಿಂದ ಹಲವು ವಿದ್ಯಾರ್ಥಿಗಳು ಕಾಯಿಲೆಗೆ ತುತ್ತಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ವಿದ್ಯಾರ್ಥಿ ನಿಲಯದ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಹಾವು ಮತ್ತಿತರ ವಿಷ ಜಂತುಗಳು ಹೆಚ್ಚಿ ಪ್ರಾಣ ಭಯದಿಂದ ಓಡಾಡುವ ದುಃಸ್ಥಿತಿ ಎದುರಾಗಿದೆ ಎಂದು ಉಪವಾಸನಿರತ ವಿದ್ಯಾರ್ಥಿಗಳು ದೂರಿದ್ದಾರೆ.
ವಿದ್ಯಾರ್ಥಿನಿಲಯವನ್ನು ಕಾಡುತ್ತಿರುವ ಹತ್ತಾರು ಸಮಸ್ಯೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳಿಗೂ ಗಮನಕ್ಕೆ ತಂದರು ಏನೂ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತು ಅನಿವಾರ್ಯವಾಗಿ ಉಪವಾಸ ನಡೆಸುತ್ತಿದ್ದೇವೆ. ತಕ್ಷಣ ಉನ್ನತ ಅಧಿಕಾರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು.