ಕನಕಪುರ: ಶಾಲಾ ದಿನಗಳಲ್ಲಿ ಪ್ರತಿಭಾನ್ವಿತ ಪುರಸ್ಕಾರ ಪಡೆಯುವ ವಿದ್ಯಾರ್ಥಿಗಳು ಮುಂದೆ ಐ.ಎ.ಎಸ್. ಐ.ಪಿ.ಎಸ್.ನಂತಹ ಉನ್ನತ ವ್ಯಾಸಂಗ ಮಾಡಿದರೆ ಪ್ರತಿಭೆಗೆ ಸಾರ್ಥಕತೆ ಉಂಟಾಗುತ್ತದೆ ಎಂದು ಬೆಂಗಳೂರಿನ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ತಿಳಿಸಿದರು.
ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ 2010-11ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಎಷ್ಟೋ ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉನ್ನತ ಮಟ್ಟದಲ್ಲಿ ಅಧಿಕಾರ ಗಳಿಸಿಕೊಂಡಿದ್ದಾರೆ. ಅವರ ವ್ಯಾಸಂಗ ಇತರರಿಗೂ ಆದರ್ಶವಾಗಬೇಕು ಎಂದು ಅವರು ಹೇಳಿದರು.
ಕನಕಪುರ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ ಎಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಈ ಒಂದು ಪ್ರತಿಭಾನ್ವಿತ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ಜೀವನದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕೆಂದು ಆಶಿಸಿದರು. ಐದು ವರ್ಷಗಳಿಂದ ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಟ್ರಸ್ಟ್ ವತಿಯಿಂದ ಪ್ರೋತ್ಸಾಹಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಪ್ರತಿಭಾನ್ವಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಮಾದೇವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸವಿತಾ ಸುರೇಶ್, ಮಾಜಿ ಅಧ್ಯಕ್ಷೆ ಸುಕನ್ಯಾ ರಂಗಸ್ವಾಮಿ, ಉಪಾಧ್ಯಕ್ಷ ವಿಶ್ವಪ್ರಿಯಾ, ಪುರಸಭೆ ಅಧ್ಯಕ್ಷ ಆರ್.ಕೃಷ್ಣಮೂರ್ತಿ ಮತ್ತಿತರರು ಕಾರ್ಯಕ್ರಮ ದಲ್ಲಿ ಹಾಜರಿದ್ದರು.