ಬಂಗಾರಪೇಟೆ: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಶುಕ್ರವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.
`ತಾಲ್ಲೂಕಿನಲ್ಲಿ ಈಗಾಗಲೇ ಮಳೆಯಿಲ್ಲದೆ ಬರಗಾಲ ಕಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಮತ್ತು ದನ ಕರುಗಳಿಗೆ ಮೇವಿನ ಕೊರತೆ ಉಂಟಾಗಿ ತೊಂದರೆ ಉಂಟಾಗಿದೆ. ಗ್ರಾಮೀಣ ಜನರು ಸಂಕಷ್ಟ ಅನುಭವುಸತ್ತಿರುವ ಸಮಯದಲ್ಲೇ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ~ ಎಂದು ದೂರಿದರು.
ಮೆರವಣಿಗೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕಡಿತ ಖಂಡಿಸಿ ಪಟ್ಟಣದ ಕುವೆಂಪು ವೃತ್ತದಿಂದ ಸಾಗಿದ ಮೆರವಣಿಗೆ ಬಜಾರ್ ರಸ್ತೆ ಹಾಗೂ ಸರ್ಕಾರಿ ಆಸ್ಪತ್ರೆ ವರೆಗೂ ತೆರಳಿತು. ರಾಜ್ಯ ಸರ್ಕಾರ ಈ ಕೂಡಲೇ ಎದುರಾಗಿರುವ ವಿದ್ಯುತ್ ಸಮಸ್ಯೆ ಪರಿಹರಿಸಬೇಕು, ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸುವುದಾಗಿ ಕಾರ್ಯಕರ್ತರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷರಾದ ಶ್ರೀನಿವಾಸ್, ನಾಗರಾಜ್, ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಣೇಶ್ಗೌಡ ಮುಂತಾದವರು ಭಾಗವಹಿಸಿದ್ದರು.