ಉಡುಪಿ: ವಿದ್ಯುತ್ ಕಡಿತ ತಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಮತ್ತು ನಿರಂತರ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಉಡುಪಿ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಮೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಮೆಸ್ಕಾಂ ಪದೇ ಪದೇ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಜನ ಸಾಮಾನ್ಯರು, ವಿದ್ಯಾರ್ಥಿಗಳು, ಕೃಷಿಕರು ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ತಕ್ಷಣ ಈ ಸಮಸ್ಯೆಯನ್ನು ಬಗೆಹರಿಸಬೇಕು ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ, ಬಿಜೆಪಿ ಮುಖಂಡರಿಗೆ ರಸ್ತೆ ಅಭಿವದ್ಧಿಯೇ ಒಂದು ದೊಡ್ಡ ವಿಷಯವಾಗಿದೆ. ಬಡವರ ಪರ ಯಾವುದೇ ಕೆಲಸ ಮಾಡುತ್ತಿಲ್ಲ. ಸಮರ್ಪಕವಾಗಿ ವಿದ್ಯುತ್, ಪಡಿತರ ಚೀಟಿ ಹಾಗೂ ಮೂಲ ಸೌಕರ್ಯ ಕೊಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಪುರಭವನ ನಿರ್ಮಿಸಿ ದೊಡ್ಡ ಸಾಧನೆ ಮಾಡಿರುವುದಾಗಿ ಬಿಜೆಪಿ ಮುಖಂಡರು ಬೀಗುತ್ತಿದ್ದಾರೆ. ಆದರೆ ಪುರಭವನ ಶ್ರೀಮಂತರಿಗಾಗಿಯೇ ಹೊರತು ಬಡವರಿಗಲ್ಲ ಎಂದು ಅವರು ಹೇಳಿದರು.