ಹೊನ್ನಾವರ: ರಾಜ್ಯದಲ್ಲಿ ತಲೆದೋರಿ ರುವ ವಿದ್ಯುತ್ ಅಭಾವಕ್ಕೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳದೆ ಹೊಣೆಗೇಡಿತನ ಪ್ರದರ್ಶಿಸುತ್ತಿದೆ ಎಂದು ಕೆ.ಪಿ.ಸಿ.ಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಕಿಡಿ ಕಾರಿದರು.
ಸೋಮವಾರ ಇಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ರಸ್ತೆ ಅವ್ಯವಸ್ಥೆ ಸೇರಿದಂತೆ ರಾಜ್ಯದಲ್ಲಿ ಕಂಡುಬಂದಿರುವ ಯಾವುದೇ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ವೈಯಕ್ತಿಕ ಶಕ್ತಿಯಿಲ್ಲ. ಯಡಿಯೂರಪ್ಪ ಹಾಗೂ ಶಟ್ಟರ್ ಗುಂಪುಗಳ ಪರಸ್ಪರ ಮೇಲಾಟ ನಡೆದಿದ್ದು ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳು ಗಿದ್ದು ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಜೆಡಿಎಸ್ನಲ್ಲಿ ಪ್ರಜಾಪ್ರಭುತ್ವದ ಲಕ್ಷಣಗಳಿಲ್ಲ ಎಂದ ಅವರು, ಜನರ ಬೆಂಬಲ ಕಾಂಗ್ರೆಸ್ ಪಕ್ಷಕ್ಕಿದೆ. ಪಕ್ಷದ ಜನಪ್ರಿಯತೆ ವೃದ್ಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು. ಭ್ರಷ್ಟಾಚಾರ ವಿರೋಧಿ ಹೋರಾಟ ನಡೆಸಿರುವ ಅಣ್ಣಾ ಹಜಾರೆ ಅವರು, ಪಕ್ಷ ರಾಜಕೀಯ ದಲ್ಲಿ ನಿರತರಾಗಿದ್ದಾರೆ ಎಂದು ಅವರು ಟೀಕಿಸಿದರು.
ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮುಖಂಡರಾದ ಷಣ್ಮುಖ ಗೌಡ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ, ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡರ, ಎಸ್.ಕೆ.ಭಾಗವತ, ಜಗದೀಪ ತೆಂಗೇರಿ ಮತ್ತಿತರರು ಉಪಸ್ಥಿತರಿದ್ದರು.