ಶಿವಮೊಗ್ಗ: ನಗರ ನೀರು ಪೂರೈಕೆಗೆ ಉಂಟಾಗುತ್ತಿದ್ದ ವಿದ್ಯುತ್ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಗಾಜನೂರಿನಲ್ಲಿ ನಿರ್ಮಿಸಿರುವ 10ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಯನ್ನು ಶಾಸಕ ಕೆ.ಬಿ.ಪ್ರಸನ್ನಕುಮಾರ ಮಂಗಳವಾರ ಪರಿಶೀಲಿಸಿದರು.
ವಿದ್ಯುತ್ ಉತ್ಪಾದನಾ ಘಟಕವು ಸುಮಾರು ರೂ.4.35ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಶಿವಮೊಗ್ಗ–ಮಂಗಳೂರು ಎಕ್ಸ್ ಪ್ರೆಸ್ ಲೈನ್ ನಿಂದ ವಿದ್ಯುತ್ ಪಡೆಯಲಾಗುತ್ತದೆ. ಆದರೆ, ಪ್ರಸ್ತುತ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸಂಪರ್ಕಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಸುಮಾರು ಮೂರು ಎಕರೆ ವಿಸ್ತೀರ್ಣದಲ್ಲಿ ಘಟಕ ಸ್ಥಾಪಿಸಲಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ವಿದ್ಯುತ್ ವಿತರಣಾ ಕೇಂದ್ರಕ್ಕೂ ಸಂಪರ್ಕ ಕಲ್ಪಿಸಲಾಗಿದೆ. ಘಟಕ ಸ್ಥಾಪನೆಯಿಂದ ಗಾಜನೂರು ಸುತ್ತಮುತ್ತಲಿನ ಗ್ರಾಮಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆಯಾಗಲಿದ್ದು, ನಗರದ ಜನತೆಗೂ ನಿರಂತರ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.
ಭೇಟಿಯ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎನ್.ರಮೇಶ್,
ಕೆಪಿಟಿಸಿಎಲ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.