ದೊಡ್ಡಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳನ್ನು ಗಮನಿಸಿದರೆ ಯಾವುದೇ ಸಂದರ್ಭದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸೂಚನೆಯಿದ್ದು ಈ ಹಿನ್ನೆಲೆಯಲ್ಲಿ ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ಬಚ್ಚೇಗೌಡ ಹೇಳಿದರು.
ಅವರು ತಾಲ್ಲೂಕಿನ ನಾರನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಸಮಾರಂಭದಲ್ಲಿ ಮಾತನಾಡಿದರು.
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಜನರು ಭಾರಿ ನಂಬಿಕೆ ಇರಿಸಿದ್ದರು. ಆದರೆ ಪಕ್ಷ ಈ ನಂಬಿಕೆಯನ್ನು 4 ವರ್ಷಗಳ ಆಡಳಿತಾವಧಿಯಲ್ಲಿ ಕಳೆದುಕೊಂಡಿದೆ. ಭ್ರಷ್ಟಾಚಾರ, ಸ್ವಜನ ಪಕ್ಷಪಾತದಿಂದಾಗಿ ಮುಖ್ಯಮಂತ್ರಿಯಾಗಿದ್ದವರು, ಸಚಿವರು ಜೈಲು ಪಾಲಾಗಿದ್ದಾರೆ. ಇದರಿಂದ ಬೇಸತ್ತಿರುವ ಮತದಾರರು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ಗೆ ಅಧಿಕಾರ ನೀಡಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರೆ ಸಾಲದು. ಗ್ರಾಮ ಮಟ್ಟದಿಂದ ಸಂಘಟನೆ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವ ಹಾಗೂ ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.
ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮಾತನಾಡಿ, ಇಂದು ಅಧಿಕಾರ ವಹಿಸಿಕೊಂಡಿರುವ ವಿವಿಧ ಘಟಕಗಳ ಪದಾಧಿಕಾರಿಗಳು, ಅಧ್ಯಕ್ಷರು ತಾಲ್ಲೂಕಿನ ಪ್ರತಿ ಬೂತ್ಗಳಿಗೂ ಭೇಟಿ ನೀಡಿ ಪಕ್ಷ ಸಂಘಟನೆ ಮಾಡುವಂತೆ ಕರೆ ನೀಡಿದರು.
ಇದೇ ವೇಳೆ ಇತ್ತೀಚಗಷ್ಟೆ ನಿಧನರಾದ ಕಾಂಗ್ರೆಸ್ ನಗರ ಸಮಿತಿ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಜಿ.ಪಂ.ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣ ಗೌಡ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಿ.ರಂಗರಾಜ್, ಕಾರ್ಯದರ್ಶಿ ಡಿ.ವಿ.ಅಶ್ವತ್ಥ್ಪ್ಪ, ಗ್ರಾಮಾಂತರ ಸಮಿತಿ ಅಧ್ಯಕ್ಷ ಎಂ.ಗೋವಿಂದರಾಜ್, ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಎಂ.ಸಿ.ರಮೇಶ್, ಬೈರೇಗೌಡ, ನರಸಿಂಹಮೂರ್ತಿ, ಪಕ್ಷದ ಮುಖಂಡರಾದ ಬಿ.ಸಿ.ವೆಂಕಟೇಶ್, ಅಪ್ಪಕಾರನ ಹಳ್ಳಿ ವೆಂಕಟೇಶ್, ಡಾ.ನಾರಾಯಣ್, ಯುವ ಕಾಂಗ್ರೆಸ್ ಸಮತಿ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಡಿ.ಸಿ.ಶಶಿಧರ್ ಮತ್ತಿತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.