ಬೆಂಗಳೂರು: ವಕೀಲರ ಸಂಘವು ಪ್ರತಿಭಟನೆಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಮತ್ತು ಆರು ಪೊಲೀಸ್ ಠಾಣೆಗಳ ಸರಹದ್ದಿನ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಆರು ಗಂಟೆಯಿಂದ ಶುಕ್ರವಾರ (ಜ.20) ಮಧ್ಯ ರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಆದೇಶ ಹೊರಡಿಸಿದ್ದಾರೆ.
`ಕೇಂದ್ರ ವಿಭಾಗದ ಹಲಸೂರುಗೇಟ್, ಹೈಗ್ರೌಂಡ್ಸ್, ಅಶೋಕನಗರ, ವಿಧಾನಸೌಧ, ಕಬ್ಬನ್ಪಾರ್ಕ್ ಮತ್ತು ಪಶ್ಚಿಮ ವಿಭಾಗದ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ವಕೀಲರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ~ ಎಂದು ಮಿರ್ಜಿ ಹೇಳಿದ್ದಾರೆ.
ಗುರುವಾರ ಸಿಟಿ ಸಿವಿಲ್ ನ್ಯಾಯಾಲಯದಿಂದ ಮೈಸೂರು ಬ್ಯಾಂಕ್ ವೃತ್ತ, ಅರಮನೆ ರಸ್ತೆ ಮಾರ್ಗವಾಗಿ ಸಿಐಡಿ ಜಂಕ್ಷನ್ವರೆಗೆ ಮಾತ್ರ ಪ್ರತಿಭಟನಾ ಮೆರವಣಿಗೆ ನಡೆಸಲು ವಕೀಲರಿಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.