ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪತ್ತು ನಿರ್ವಹಣೆಗೆ ಸಮಿತಿ: ಸಿ.ಎಂ

Last Updated 1 ಜೂನ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿ, ತುರ್ತು ಸಂದರ್ಭಗಳಲ್ಲಿ ನಗರದ ಜನರ ಕಷ್ಟಗಳಿಗೆ ಸ್ಪಂದಿಸಲು ಅಗತ್ಯ ಕ್ರಮ ಕೈ ಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನಿಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬದಲು, ಬೆಂಗಳೂರಿಗೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಅವರು ಹೇಳಿದರು.

ಶುಕ್ರವಾರ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಡಿ. ವೆಂಕಟೇಶಮೂರ್ತಿ, ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮೀನಾರಾಯಣ ಅವರ ಜೊತೆ ಗೃಹಕಚೇರಿ `ಕೃಷ್ಣಾ'ದಲ್ಲಿ ಸಿದ್ದರಾಮಯ್ಯ ಅವರು ಶನಿವಾರ ಮಾತುಕತೆ ನಡೆಸಿದರು. ಮಳೆ ಸುರಿದ ಸಮಯದಲ್ಲಿ ಮಾತ್ರ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳುವುದು ಸರಿಯಲ್ಲ.

ನಗರದ ಕೆರೆಗಳಲ್ಲಿ ತುಂಬಿಕೊಂಡಿರುವ ಹೂಳು ತೆಗೆಯುವುದು, ಚರಂಡಿಗಳನ್ನು ಶುಚಿಗೊಳಿಸುವುದು, ತ್ಯಾಜ್ಯ ವಿಲೇವಾರಿ ಕಾರ್ಯಗಳನ್ನು ಕಾಲಕಾಲಕ್ಕೆ ಮಾಡಬೇಕು. ಈ ಸಂದರ್ಭದಲ್ಲಿ ತುರ್ತಾಗಿ ಆಗಬೇಕಿರುವ ಕೆಲಸಗಳನ್ನು ಪೂರ್ಣಗೊಳಿಸಬೇಕು. ಮುಂದಿನ ಮಳೆಗಾಲದಲ್ಲಿ ಇಂಥ ಸಮಸ್ಯೆಗಳು ಎದುರಾಗದಂತೆ ನಿಗಾವಹಿಸಬೇಕು ಎಂದೂ ಸಿದ್ದರಾಮಯ್ಯ ಆದೇಶಿಸಿದರು. ಬಿಬಿಎಂಪಿ ಸಹಾಯವಾಣಿಯ ಸೇವೆಗಳನ್ನು ಇನ್ನಷ್ಟು ಉತ್ತಮಪಡಿಸಬೇಕು ಎಂದು ತಾಕೀತು ಮಾಡಿದರು.

`ಎಲ್ಲ ಜಿಲ್ಲೆಗಳಂತೆ ಬೆಂಗಳೂರು ನಗರದಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಇದರ ವ್ಯಾಪ್ತಿಯಲ್ಲಿ ಬಿಬಿಎಂಪಿ ಕೂಡ ಸೇರುತ್ತದೆ. ಆದರೆ, ಬಿಬಿಎಂಪಿ ಆಯುಕ್ತರು ಹಿರಿಯ ಐಎಎಸ್ ಅಧಿಕಾರಿಯಾದ ಕಾರಣ ಜಿಲ್ಲಾಧಿಕಾರಿ ಕರೆಯುವ ಸಭೆ ಹೆಚ್ಚು ಮಹತ್ವ ಪಡೆಯುತ್ತಿಲ್ಲ. ಹೀಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ' ಎಂಬ ಅಂಶವನ್ನು ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಾಮಲಿಂಗಾರೆಡ್ಡಿ, `ಗುತ್ತಿಗೆದಾರರ ಮೇಲೆ ಅವಲಂಬಿಸದೆ, ತ್ಯಾಜ್ಯ ವಿಲೇವಾರಿ ಕಾರ್ಯಗಳಿಗೆ ಒಟ್ಟು 4,000 ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದಕ್ಕೆ ಹಣಕಾಸು ಇಲಾಖೆಯ ಒಪ್ಪಿಗೆ ದೊರೆತಿದೆ. ನೇಮಕ ಪ್ರಕ್ರಿಯೆ ಮೂರು ತಿಂಗಳಲ್ಲಿ ಆರಂಭವಾಗಲಿದೆ' ಎಂದು ತಿಳಿಸಿದರು.

ಅಂದಾಜು ರೂ 600 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಾಮಗಾರಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಸಂಚಾರ ದಟ್ಟಣೆ ತಗ್ಗಿಸುವ ಯೋಜನೆ ಮತ್ತು ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸುವ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. ನಗರದ ವಿವಿಧ ಸಮಸ್ಯೆಗೆ ಸ್ಪಂದಿಸುವ ಜವಾಬ್ದಾರಿಯನ್ನು ಬೇರೆ ಬೇರೆ ಇಲಾಖೆಗಳಿಗೆ ವಹಿಸಲಾಗಿದೆ.

ಒಣಗಿದ ಮರ ಕಡಿದು, ತೆರವುಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಗೆ, ವಿದ್ಯುತ್ ಕಂಬಗಳು ಸುಸ್ಥಿತಿಯಲ್ಲಿವೆಯೇ ಎಂಬುದನ್ನು ಬೆಸ್ಕಾಂ ಅಧಿಕಾರಿಗಳು ನಿಗಾ ವಹಿಸಬೇಕು, ನಿರ್ಮಾಣ ಮಾಡಿರುವ ಬಡಾವಣೆಗಳಲ್ಲಿ ಮಳೆ ನೀರು ಚರಂಡಿ ವ್ಯವಸ್ಥೆ ಸರಿ ಇದೆಯೇ ಎಂಬುದನ್ನು ಬಿಡಿಎ ಗಮನಿಸಬೇಕು ಎಂಬ ನಿರ್ದೇಶನ ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT