ದೇವನಹಳ್ಳಿ: ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮುಖ್ಯಾಧಿಕಾರಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಶುಕ್ರವಾರ ಪುರಸಭೆ ಸದಸ್ಯರು ಪುರಸಭೆಯ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪುರಸಭೆ ಅಧ್ಯಕ್ಷ ಎ.ಎನ್.ವಸಂತಬಾಬು ಮಾತನಾಡಿ, `ಮುಖ್ಯಾಧಿಕಾರಿ ಸುಮಾ ಅವರು ಟೆಂಡರ್ ಅನುಮೋದನೆ ಮತ್ತು ಜಿಲ್ಲಾಧಿಕಾರಿಗಳಿಂದ ಹೆಚ್ಚುವರಿ ಅನುದಾನ ಬಿಡುಗಡೆ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ ಅನವಶ್ಯಕ ತೊಡಕು ಉಂಟು ಮಾಡುತ್ತಿದ್ದಾರೆ' ಎಂದು ದೂರಿದರು.
ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳದೆ ಬಾಕಿ ಉಳಿಸಿಕೊಳ್ಳಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ನಗರಾಭಿವೃದ್ಧಿ ಇಲಾಖೆಯು ಮುಖ್ಯಾಧಿಕಾರಿಗೆ ಕರ್ತವ್ಯ ಲೋಪದ ಬಗ್ಗೆ ನೋಟಿಸ್ ನೀಡಿದ್ದಾರೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ ಎಂದರೆ ನಮ್ಮನ್ನು ಆಯ್ಕೆ ಮಾಡಿದ ಜನತೆಗೆ ನಾವು ಹೇಗೆ ಉತ್ತರಿಸಬೇಕು' ಎಂದು ವಸಂತಬಾಬು ಆಕ್ರೋಶ ವ್ಯಕ್ತಪಡಿಸಿದರು.ಅಭಿವೃದ್ಧಿ ಕಾಮಗಾರಿ ವಿಚಾರಗಳನ್ನು ನನ್ನ ಗಮನಕ್ಕೆ ತರದೆ ಕೈಗೊಳ್ಳುತ್ತೀದ್ದೀರಿ ಎಂದು ಸುಮಾ ಅವರು ಆರೋಪಿಸುತ್ತಿದ್ದಾರೆ. ಆದರೆ ಪುರಸಭಾ ವ್ಯಾಪ್ತಿಯಲ್ಲಿರುವ ಪ್ರತಿ ವಾರ್ಡಿನ ಮನೆಗಳ ನಲ್ಲಿಗಳ ಸಂಪರ್ಕಕ್ಕೆ ಮೀಟರ್ ಅಳವಡಿಕೆಯನ್ನು ಚರ್ಚಿಸುವ ಸಭೆಗಳಿಗೆಲ್ಲಾ ಅವರು ಅಡ್ಡಿಯಾಗುತ್ತಿದ್ದಾರೆ' ಎಂದು ಆರೋಪಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ, ಮಾಜಿ ಅಧಕ್ಷ ಹನುಮಂತಪ್ಪ ಸೇರಿದಂತೆ ಹದಿನೈದು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.