ಬೇಲೂರು: ದೇಶದಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.
ವಿವೇಕಾನಂದ್ ಯೂತ್ ಮೂವ್ಮೆಂಟ್, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಜಯಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಚೆನ್ನಕೇಶವ ದೇವಾಲಯದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ದೇಶಾದ್ಯಂತ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದನ್ನು ತಡೆಗಟ್ಟಲು ಜನ್ ಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸ ಬೇಕೆಂದು ಹಲವಾರು ದಿನಗಳಿಂದ ಒತ್ತಾಯಿಸುತ್ತಿದ್ದರೂ, ಭ್ರಷ್ಟ ರಾಜಕಾರಣಿಗಳು ಮಸೂದೆ ಮಂಡನೆಯಾಗಲು ಬಿಡುತ್ತಿಲ್ಲ. ಇದರ ವಿರುದ್ಧ ದೇಶದ 130 ನಗರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಾಸನ ಜಿಲ್ಲೆಯ ಏಳು ತಾಲ್ಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ಮಾಡಲಾಗುತ್ತಿದೆ. ಇದರ ಜೊತೆಗೆ ಜನರ ಸಹಿ ಸಂಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಕಳುಹಿಸಲಾಗುವುದು ಎಂದು ವಿವೇಕಾನಂದ ಯೂತ್ ಮೂವ್ಮೆಂಟ್ನ ರಾಜೇಶ್ ಅವರು ತಿಳಿಸಿದರು.ಪ್ರತಿಭಟನೆಯಲ್ಲಿ ಸಿದ್ದರಾಮಪ್ಪ, ಅರುಣ್ಕುಮಾರ್, ಚಂದ್ರಶೇಖರ್, ಜಾಕಿರ್ ಹಾಗೂ ಇತರರು ಭಾಗವಹಿಸಿದ್ದರು.