ದಾವಣಗೆರೆ: ಜಿಲ್ಲೆಯಲ್ಲಿ ವಿಶೇಷ ಭದ್ರತೆಗಾಗಿ 43 ಮಂದಿ ಕಾನ್ಸ್ಟೇಬಲ್ ಒಳಗೊಂಡ `ವಿಶೇಷ ಕಮಾಂಡೊ ಪಡೆ' ಸಿದ್ಧಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪ್ರಕಾಶ್ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಉದ್ಭವಿಸುವ ಅತ್ಯಂತ ಕ್ಲಿಷ್ಟ ಸನ್ನಿವೇಶದಲ್ಲಿ ಆ `ಕಮಾಂಡೊ ಪಡೆ'ಯನ್ನು ಬಳಕೆ ಮಾಡಿಕೊಳ್ಳಲಾಗು ವುದು. ಆಯ್ಕೆಯಾದ ಕಾನಸ್ಟೇಬಲ್ ತಂಡಕ್ಕೆ ಈಗಾಗಲೇ ತರಬೇತಿ ಪ್ರಾರಂಭಿಸಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕಾಣೆ ಆಗುತ್ತಿರುವ ಮಹಿಳೆಯರು ಹಾಗೂ ಮಕ್ಕಳ ಪತ್ತೆಗೆ ವಿಶೇಷ ಕ್ರಮ ಕೈಗೊಳ್ಳ ಲಾಗುವುದು.
ನಗರದಲ್ಲಿ ಒಂಟಿ ಮಹಿಳೆಯರು ಹಾಗೂ ವೃದ್ಧರು ವಾಸಿಸುವ ಮನೆಗಳಿಗೆ ಭದ್ರತೆಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಗಣೇಶನ ಹಬ್ಬದ ವೇಳೆಗೆ ನಗರದ ಆಯಕಟ್ಟಿನ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದ ಅವರು, ಹೈದರಾಬಾದ್-ಕರ್ನಾಟಕ ವಿಶೇಷ ಸ್ಥಾನಮಾನ ವ್ಯಾಪ್ತಿಗೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಸೇರ್ಪಡೆ ಮಾಡುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಪರಿಸ್ಥಿತಿ ಕೈಮೀರದಂತೆ ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.