ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ `ವೈದೇಹಿ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಅಂಡ್ ರಿಸರ್ಚ್ ಸೆಂಟರ್~ ಹೊಸದಾಗಿ ಪ್ರಾರಂಭಿಸಿರುವ `ಮಹಿಳೆ ಮತ್ತು ನಾವು~ (ವುಮೆನ್ ಅಂಡ್ ವಿ) ಕಾರ್ಯಕ್ರಮಕ್ಕೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಚಾಲನೆ ನೀಡಿದರು.
ರಾಜಭವನದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯಪಾಲರು, `ಮಹಿಳೆಯರಿಗಾಗಿಯೇ ವಿಶೇಷ ಕಾರ್ಯಕ್ರಮ ರೂಪಿಸುವ ಮೂಲಕ ವೈದೇಹಿ ಸಂಸ್ಥೆಯು ಒಳ್ಳೆಯ ಕೆಲಸವನ್ನು ಮಾಡಿದೆ. ಕ್ಯಾನ್ಸರ್ ಮತ್ತು ಅದಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ತುತ್ತಾಗುವ ಮಹಿಳೆಯರಿಗೆ ಉತ್ತಮ ಚಿಕಿತ್ಸಾ ಸೌಕರ್ಯಗಳು ದೊರೆತು ಆರೋಗ್ಯವಂತ ಜೀವನ ನಡೆಸಲು ಸಾಧ್ಯವಾಗಲಿದೆ~ ಎಂದು ಆಶಿಸಿದರು.
ಇದೇ ಸಂದರ್ಭದಲ್ಲಿ ಸಂಸ್ಥೆ ಏರ್ಪಡಿಸಿದ್ದ ಕಾಲ್ನಡಿಗೆ ಜಾಥಾಕ್ಕೆ ರಾಜ್ಯಪಾಲರು ಹಸಿರು ನಿಶಾನೆ ತೋರಿಸಿದರು. ಈ ಕಾರ್ಯಕ್ರಮದಲ್ಲಿ ವೈದೇಹಿ ಸಂಸ್ಥೆ ಮತ್ತು ಮಲ್ಯ ಆಸ್ಪತ್ರೆಗಳಿಂದ ನೂರಾರು ವೈದ್ಯರು, ವೈದ್ಯ ವಿದ್ಯಾರ್ಥಿಗಳು, ವೃತ್ತಿಪರರು ಭಾಗವಹಿಸಿದ್ದರು.