ಚೆನ್ನೈ (ಪಿಟಿಐ): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿಶ್ವರೂಪಂ ಚಿತ್ರವನ್ನು ನಿಷೇಧಿಸಬೇಕಾಯಿತು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಗುರುವಾರ ಸಮರ್ಥಿಸಿಕೊಂಡಿದ್ದಾರೆ.
ಕಮಲ್ ಹಾಸನ್ ಅವರ ವಿಶ್ವರೂಪಂ ಚಿತ್ರ ನಿಷೇಧದ ಬಗ್ಗೆ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಲಲಿತಾ ಚಿತ್ರದಲ್ಲಿ ಆಕ್ಷೇಪಾರ್ಹ ವಿಷಯಗಳಿದ್ದು, ರಾಜ್ಯದಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಚಿತ್ರವನ್ನು ನಿಷೇಧಿಸಬೇಕಾಯಿತು ಎಂದರು.
ಪೊಲೀಸ್ ಸಿಬ್ಬಂದಿ ಕೊರತೆ ಇರುವುದರಿಂದ ಎಲ್ಲಾ ಚಿತ್ರಮಂದಿರಗಳಿಗೂ ಪೊಲೀಸ್ ಭದ್ರತೆ ನೀಡಲು ಸಾಧ್ಯವಿಲ್ಲ ಹಾಗಾಗಿ ಈ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ಜಯಾ ಮಾಹಿತಿ ನೀಡಿದರು. ಆಕ್ಷೇಪಾರ್ಹ ವಿಷಯಗಳಿಗೆ ಕತ್ತರಿ ಪ್ರಯೋಗ ಮಾಡಿದರೆ ಚಿತ್ರವನ್ನು ಪ್ರದರ್ಶಿಸಲು ಅನುಮತಿ ನೀಡಲಾಗುವುದು ಎಂದರು. ನನಗೆ ಕಮಲ್ ಮೇಲೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಮತ್ತು ಜಯಾ ಟಿವಿಗೆ ಸಿನಿಮಾದ ಕಾಫಿ ರೈಟ್ ನೀಡದಿರುವುದು ಈ ಅವಾಂತರಗಳಿಗೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದರಲ್ಲಿ ಹುರುಳಿಲ್ಲ ಎಂದು ಜಯಾ ಸ್ಪಷ್ಟಪಡಿಸಿದರು.