ನವದೆಹಲಿ: ವೀರಶೈವ ಸಮುದಾಯಕ್ಕೂ ಬೌದ್ಧ, ಜೈನ, ಸಿಖ್ ಸಮುದಾಯಗಳಂತೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
ರಾಜ್ಯದ ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರನ್ನು ಗುರುವಾರ ಭೇಟಿ ಮಾಡಿದ್ದ ವೀರಶೈವ ಸಮಾಜದ ಮುಖಂಡರು ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಒತ್ತಾಯಿಸಿದರು.
ವೀರಶೈವರು ಹಿಂದುಗಳಲ್ಲ. ಬಸವಣ್ಣ ವೀರಶೈವ ಧರ್ಮ ಸ್ಥಾಪಿಸಿದ್ದಾರೆ. ದಕ್ಷಿಣ ಭಾರತದಲ್ಲಿ 4 ಕೋಟಿ ಜನ ವೀರಶೈವರಿದ್ದು, ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಆಗ್ರಹಿಸಿದರು. ಅನಂತರ ಶಾಮನೂರು ಶಿವಶಂಕರಪ್ಪ ಮತ್ತಿತರರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ತಮ್ಮ ಬೇಡಿಕೆಯನ್ನು ಮಾನ್ಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡುವಂತೆ ಕೋರಿದರು. ಕಾಂಗ್ರೆಸ್ ಅಧ್ಯಕ್ಷರ ಮುಂದೆ ರಾಜಕೀಯ ವಿಚಾರ ಕುರಿತು ಪ್ರಸ್ತಾಪ ಮಾಡಲಿಲ್ಲ. ಅನಂತರ ದಿಗ್ವಿಜಯ್ ಸಿಂಗ್ ಅವರನ್ನು ಸಚಿವರು ಕಂಡು ಮಾತುಕತೆ ನಡೆಸಿದರು. ಇದು ಸೌಜನ್ಯದ ಭೇಟಿ. ಸಚಿವರಾದ ಬಳಿಕ ಅವರು ದೆಹಲಿಗೆ ಬಂದಿರಲಿಲ್ಲ ಎಂದು ಶಿವಶಂಕರಪ್ಪ ಅವರ ಆಪ್ತ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಕೃಷಿಸಚಿವ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಅತಿವೃಷ್ಟಿ/ ಅನಾವೃಷ್ಟಿಯಿಂದ ಹಾಳಾಗಿರುವ ಅಡಿಕೆ, ತೆಂಗು ಮತ್ತು ದಾಳಿಂಬೆ ಬೆಳೆಗಳಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ 1800 ಕೋಟಿ ಮೊತ್ತದ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ಸಚಿವರು ವಿವರಿಸಿದರು. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ತೋಟಗಾರಿಕೆ ಬೆಳೆ ನಷ್ಟವಾದ ಬಗ್ಗೆ ತಮಗೆ ಮಾಹಿತಿ ಇದೆ. ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವುದಾಗಿ ಪವಾರ್ ಭರವಸೆ ನೀಡಿದರು.