ಬ್ಯಾಡಗಿ : ರಾಜ್ಯ ಸರ್ಕಾರದ ನೂತನ ವೃತ್ತಿ ಶಿಕ್ಷಣ ಕಾಯ್ದೆಯನ್ನು ವಿರೋಧಿಸಿ ಎಸ್ಎಫ್ಐ ತಾಲ್ಲೂಕು ಘಟಕದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಮುಂಜಾನೆ ಎಸ್ಜೆಜೆಎಂ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಪ್ರತಿಭಟನಾ ಮೆರವಣೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿತು. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ದಾರಿಯುದ್ದಕ್ಕೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್ಎಫ್ಐ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ ಪೂಜಾರ ಮಾತನಾಡಿ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯ್ದೆ ಹೆಸರಿನಲ್ಲಿ ಸರ್ಕಾರ ವೃತ್ತಿ ಶಿಕ್ಷಣವನ್ನು ಮಾರಾಟ ಮಾಡಲು ಹೊರಟಿದೆ.
ಎಂಜಿನಿಯರಿಂಗ್, ಮೆಡಿಕಲ್, ಡೆಂಟಲ್ ಸೇರಿದಂತೆ ವೃತ್ತಿಪರ ಕೋರ್ಸ್ಗಳ ಶುಲ್ಕ ಹೆಚ್ಚಿಸಿದೆ. ಅಲ್ಲದೆ ಈಗ ಖಾಸಗಿ ಕಾಲೇಜುಗಳಿಗೆ ಸಿಇಟಿ ಪ್ರವೇಶ ಪ್ರಕ್ರಿಯೆ ಕೈಬಿಡಲು ಹೊರಟಿದೆ. ಇದರಿಂದ ಲಕ್ಷಾಂತರ ದಲಿತ, ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಹೇಳಿದರು.
ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯದೆ ವಿದ್ಯಾರ್ಥಿಗಳ ಹಿತ ಕಾಪಾಡಲು ಮುಂದಾಗಬೇಕು. ತಪ್ಪಿದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗು ವುದೆಂದು ಎಚ್ಚರಿಸಿದರು. ವಿದ್ಯಾರ್ಥಿ ಮುಖಂಡರಾದ ರಾಘವೇಂದ್ರ ಭೋವಿ, ಮಂಜುನಾಥ ಲಿಂಗಣ್ಣನವರ, ವಾಸು ಜೈನರ್, ಉಷಾ ಕೋರಿಶೆಟ್ಟರ, ಮಂಜುನಾಥ ಪಾಲ್ಗೊಂಡಿದ್ದರು.