ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಮುರೂರು ಗ್ರಾಮದ ಪ್ರಸನ್ನ ಭಂಡಾರಿ (37) ಎಂಬಾತನನ್ನು ಬಂಧಿಸಿರುವ ಹೈಗ್ರೌಂಡ್ಸ್ ಪೊಲೀಸರು 21 ಲಕ್ಷ ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ.
ಪ್ರಸನ್ನನ ಸಹಚರರಾದ ದೆಹಲಿ ಮೂಲದ ಹೇಮಂತ್ ಮತ್ತು ಮುಂಬೈ ಮೂಲದ ಸಚಿನ್ ವಿಶ್ವನಾಥ್ ಚೊಲ್ಲೆ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಆಂಧ್ರಪ್ರದೇಶ ಮೂಲದ ಜಗದಾಂಬ ಎಂಬುವರ ಮಗನಿಗೆ ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 21 ಲಕ್ಷ ಹಣ ಪಡೆದುಕೊಂಡು ವಂಚಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರವು ವೆಬ್ಸೈಟ್ನಲ್ಲಿ ಪ್ರಕಟಿಸುವ ರ್ಯಾಂಕ್ ವಿಜೇತರ ಪಟ್ಟಿಯ ವಿವರಗಳನ್ನು ಪರಿಶೀಲಿಸುತ್ತಿದ್ದ ಆರೋಪಿಗಳು, ಕಾಲೇಜುಗಳ ಆಡಳಿತ ಮಂಡಳಿಯ ಸದಸ್ಯರ ಸೋಗಿನಲ್ಲಿ ಸೀಟು ಸಿಗದ ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಿದ್ದರು. ಆ ವಿದ್ಯಾರ್ಥಿಗಳಿಗೆ ಸೀಟು ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದರು.
ಜಗದಾಂಬ ಅವರನ್ನು ಭೇಟಿ ಮಾಡಿದ ಆರೋಪಿಗಳು, ತಾವು ಹುಬ್ಬಳ್ಳಿಯವರು ಎಂದು ಪರಿಚಯಿಸಿಕೊಂಡಿದ್ದರು. ನಿಮ್ಮ ಮಗನಿಗೆ ವೈದ್ಯಕೀಯ ಸೀಟು ಕೊಡಿಸುತ್ತೇವೆ ಎಂದು ಅವರಿಂದ ಹಣ ಪಡೆದು ಪರಾರಿಯಾಗಿದ್ದರು. ಈ ಸಂಬಂಧ ಜಗದಾಂಬ ಅವರು ನೀಡಿದ್ದ ದೂರನ್ನು ಆಧರಿಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.