ಬೀದರ್: `ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಚಟುವಟಿಕೆಗಳು ಪೂರಕವಾಗಲಿವೆ~ ಎಂದು ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ್ ಹೊನ್ನಪ್ಪಗೋಳ್ ಶುಕ್ರವಾರ ಅಭಿಪ್ರಾಯಪಟ್ಟರು.
ಮೂರು ದಿನಗಳ ಕಾಲ ನಗರದಲ್ಲಿ ನಡೆಯಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ ಅಂತರಕಾಲೇಜು ಮಟ್ಟದ ಯುವಜನ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಯುವಜನೋತ್ಸವವು ಕಲೆ-ಸಂಸ್ಕೃತಿ ಬಿಂಬಿಸುವ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ ಎಂದರು.
ತೋಟಗಾರಿಕಾ ಕಾಲೇಜಿನ ವಿಶೇಷ ಅಧಿಕಾರಿ ಎಸ್.ಐ. ಹಣಮಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉತ್ಸವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ತೋಟಗಾರಿಕಾ ಮಹಾವಿದ್ಯಾಲಯ ಅರಭಾವಿ, ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ, ಪಿಜಿ ಸೆಂಟರ್ ಬೆಂಗಳೂರು, ತೋಟಗಾರಿಕಾ ಮಹಾವಿದ್ಯಾಲಯ ಕೋಲಾರ, ತೋಟಗಾರಿಕಾ ಮಹಾವಿದ್ಯಾಲಯ ಮೈಸೂರು, ತೋಟಗಾರಿಕಾ ಮಹಾವಿದ್ಯಾಲಯ ಹಿರಿಯೂರು, ತೋಟಗಾರಿಕಾ ಮಹಾವಿದ್ಯಾಲಯ ಶಿರಸಿ, ತೋಟಗಾರಿಕಾ ಮಹಾವಿದ್ಯಾಲಯ ಕೊಪ್ಪಳ ಮತ್ತು ಬೀದರ್ ಸೇರಿದಂತೆ ಒಟ್ಟು 10 ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.