ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರಾಗಿ ಇದೇ 16ರಂದು ಅಧಿಕಾರ ವಹಿಸಿಕೊಂಡಿದ್ದ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ಗುರುವಾರ (ಅ.18) ಏಕಾಏಕಿ ಎತ್ತಂಗಡಿ ಮಾಡಲಾಗಿದೆ. ದಿಢೀರ್ ಬದಲಾವಣೆಗೆ ಕಾರಣ ಏನೆಂದುಗೊತ್ತಾಗಿಲ್ಲ.
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ವಿ.ಶಂಕರ್ ಅವರನ್ನು ಹೊಸ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಎಂ.ಡಿ. ನೇಮಕ ವಿಚಾರದಲ್ಲಿ ವಿವಾದವುಂಟಾದ ಕಾರಣಕ್ಕೆ ಕೆಎಂಎಫ್ ಆಡಳಿತ ಮಂಡಳಿಯೇ ಐಎಎಸ್ ಅಧಿಕಾರಿಯನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಗುಪ್ತ ಅವರಿಗೆ ಎಂ.ಡಿ. ಹುದ್ದೆಯ ಹೆಚ್ಚುವರಿ ಜವಾಬ್ದಾರಿ ಕೊಟ್ಟು ನೇಮಕ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.