ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣ್ಯಾ ಕೈಗೆ ಶಸ್ತ್ರಚಿಕಿತ್ಸೆ: ಆರೋಗ್ಯ ಚೇತರಿಕೆ

Last Updated 7 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜಿನ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡಿದ್ದ ಸೇಂಟ್ ಜೋಸೆಫ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶರಣ್ಯಾ (18) ಕೈಗೆ ಶುಕ್ರವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮಲ್ಯ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

`ಚಿಕಿತ್ಸೆಗೆ ಸ್ಪಂದಿಸುತ್ತಿರುವ ಶರಣ್ಯಾ ಸದ್ಯ ಚೇತರಿಸಿಕೊಂಡಿದ್ದಾಳೆ. ಚಿಕಿತ್ಸೆ ಪೂರ್ಣಗೊಂಡ ನಂತರ ಆಕೆಯೊಂದಿಗೆ ಆಸ್ಪತ್ರೆಯ ಮನೋವೈದ್ಯರು ಸಮಾಲೋಚನೆ ನಡೆಸಲಿದ್ದಾರೆ' ಎಂದು ಮಲ್ಯ ಆಸ್ಪತ್ರೆಯ ವೈದ್ಯಕೀಯ ಮೇಲ್ವಿಚಾರಕಿ ಡಾ. ಕಾಂಚನಾ ಸಾನ್ಯಲ್ ತಿಳಿಸಿದರು.

ಶರಣ್ಯಾ ಆತ್ಮಹತ್ಯೆಗೆ ಯತ್ನಿಸಿದ ಸುದ್ದಿಯನ್ನು ಮಾಧ್ಯಮಗಳು ಭಿತ್ತರಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕಾಂಚನಾ, `ಶರಣ್ಯಾ ಈಗಾಗಲೇ ಕೆಲವು ಒತ್ತಡಗಳಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ, ಮಾಧ್ಯಮಗಳು ಈ ರೀತಿ ಸುದ್ದಿ ಪ್ರಸಾರ ಮಾಡುತ್ತವೆ ಎಂದು ಆಕೆಗೆ ಮೊದಲೇ ಗೊತ್ತಿದ್ದರೆ ಖಂಡಿತಾ ಅವಳು ಆ ನಿರ್ಧಾರಕ್ಕೆ ಬರುತ್ತಿರಲಿಲ್ಲ' ಎಂದರು.

`ಶರಣ್ಯಾ ಪರೀಕ್ಷೆಯಲ್ಲಿ ನಕಲು ಮಾಡಲು ಹೆಚ್ಚಿನ ಅಂಕ ಗಳಿಸಬೇಕೆಂಬ ಪೋಷಕರ ಒತ್ತಡವೂ ಕಾರಣವಿರಬಹುದು. ಆಕೆ ಆಘಾತದಿಂದ ಹೊರಬರಲು ಸ್ವಲ್ಪ ಸಮಯ ಬೇಕಾಗುತ್ತದೆ. ಹೆಚ್ಚಿನ ಸಮಾಲೋಚನೆ ನಡೆಸುವ ಅಗತ್ಯವಿದೆ' ಎಂದು ಮನೋವೈದ್ಯ ಡಾ.ಪ್ರಕಾಶ್ ಅಪ್ಪಯ್ಯ ಅಭಿಪ್ರಾಯಪಟ್ಟರು. `ಪರಿಕ್ಷಾ ಕೊಠಡಿಯಲ್ಲಿದ್ದ ಮೇಲ್ವಿಚಾರಕಿ ಆಘಾತದಿಂದ ಇನ್ನೂ ಹೊರಬಂದಿಲ್ಲ. ಅವರ ಮುಖದಲ್ಲಿ ಈಗಲೂ ಭಯ ಕಾಣುತ್ತಿದೆ.

ಸದ್ಯ ಕಿರುಪರೀಕ್ಷೆಯನ್ನು ಮುಂದೂಡಲಾಗಿದೆ' ಎಂದು ಕಾಲೇಜಿನ ವಿದ್ಯಾರ್ಥಿಯೊಬ್ಬರು ತಿಳಿಸಿದರು. ಕಿರುಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವೇಳೆ ಕೊಠಡಿ ಮೇಲ್ವಿಚಾರಕರಿಗೆ ಸಿಕ್ಕಿಬಿದ್ದ ಕಾರಣಕ್ಕೆ ಶರಣ್ಯಾ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದರು.
ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಂದ್ರಾಲೇಔಟ್ ಸಮೀಪದ ಬಿಸಿಸಿ ಲೇಔಟ್‌ನಲ್ಲಿ ಗುರುವಾರ ನಡೆದಿದೆ.ಬಿಸಿಸಿ ಲೇಔಟ್ ಎರಡನೇ ಮುಖ್ಯರಸ್ತೆ ನಿವಾಸಿ ಬಸವರಾಜ್ ಎಂಬುವರ ಪತ್ನಿ ಶ್ವೇತಾ (26) ಆತ್ಮಹತ್ಯೆ ಮಾಡಿಕೊಂಡವರು. ಅವರ ವಿವಾಹವಾಗಿ ಒಂದು ವರ್ಷವಾಗಿತ್ತು. ಕಿರುತೆರೆ ಸಹಾಯಕ ನಿರ್ದೇಶಕರಾಗಿರುವ ಬಸವರಾಜ್ ಅವರು ಕೆಲಸದ ನಿಮಿತ್ತ ತಮಿಳುನಾಡಿಗೆ ಹೋಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದ ಶ್ವೇತಾ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

`ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಅವರು ಪತ್ರ ಬರೆದಿಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ. ಚಂದ್ರಾಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT