ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಪೂರಿನಲ್ಲಿ ವಸತಿ ರಹಿತರ ಸಮಾವೇಶ

Last Updated 3 ಜೂನ್ 2011, 8:45 IST
ಅಕ್ಷರ ಗಾತ್ರ

ಕೋಲಾರ: ರಾಜ್ಯ ಮತ್ತು ಕೇಂದ್ರ ಸರ್ಕಾರ ಮೂಲಸೌಕರ್ಯಗಳನ್ನು ಕಲ್ಪಿಸದೆ ಭ್ರಷ್ಟಾಚಾರ ನಡೆಸುತ್ತಿವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ಆಕ್ರೋಷ ವ್ಯಕ್ತಪಡಿಸಿದರು.

ತಾಲ್ಲೂಕಿನ ಶಾಪೂರು ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ಜನವಾದಿ ಮಹಿಳಾ ಸಂಘಟನೆ ಬುಧವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ- ವಸತಿ ರಹಿತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಗಳು ಹತ್ತಾರು ಯೋಜನೆಜಾರಿಗೆ ತಂದರೂ ಅವುಗಳ ಜಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಬಡವರಿಗೆ ಸೂರು ಮಾತ್ರ ದೊರಕುತ್ತಿಲ್ಲ. ವಸತಿ - ನಿವೇಶನ ರಹಿತರಿಗೆ ಸೂರು ಒದಗಿಸುವಂತೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಹೋರಾಟಗಳನ್ನು ನಡೆಸಲಾಗುತ್ತಿದೆ. ಬೇಡಿಕೆ ಈಡೇರುವ ತನಕ ಹೋರಾಟ ನಡೆಸಲಾಗುವುದು ಎಂದರು.

ಸಿಪಿಐ(ಎಂ) ತಾಲ್ಲೂಕು ಘಟಕದ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ದೊರಕಿ 65 ವರ್ಷಗಳಾದರೂ ಸರ್ಕಾರಗಳು ದೇಶದ ಎಲ್ಲಾ ಜನರಿಗೆ ಕನಿಷ್ಠ ಮೂಲಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ರಾಜಕಾರಣಿಗಳು ಚುನಾವಣೆಯ ಸಂದರ್ಭದಲ್ಲಿ ಆಸೆ - ಆಮಿಷಗಳನ್ನು ಒಡ್ಡಿ ಮತಗಳನ್ನು ಪಡೆದು ನಂತರ ಜನರನ್ನು ಮರೆಯುತ್ತಾರೆ. ಅಂಥವರಿಗೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ - ನಿವೇಶನ ರಹಿತರ ಹೋರಾಟ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಹೊಲ್ಲಂಬಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ಎ.ವಿ.ರಮೇಶ್ ಸರ್ವಾನುಮತದಿಂದ ಆಯ್ಕೆಯಾದರು. ಡಿ.ವೈ.ಎಫ್.ಐ. ಮುಖಂಡ ಎ.ವಿ.ರಮೇಶ್ ಸ್ವಾಗತಿಸಿದರು. ಡಿ.ವೈ.ಎಫ್.ಐ. ಮುಖಂಡ ಸುಬ್ರಮಣಿ ವಂದಿಸಿದರು.

ಮುಖಂಡರಾದ ವಿ.ಗೀತಾ, ಎಂ.ವಿಜಯಕೃಷ್ಣ, ವೆಂಕಟರಾಮ್, ಅಪ್ಪಯ್ಯಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT