ಬೆಂಗಳೂರು: ಶಾಲಾ ಸಮಯದಲ್ಲಿ ಶಿಕ್ಷಕರು ಮೊಬೈಲ್ ಬಳಸುವುದನ್ನು ನಿಷೇಧಿಸಲು ಅಧಿಸೂಚನೆ ಹೊರಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿ.ತಿರುವರಂಗ ನಾರಾಯಣಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಶಾಲಾ ಸಮಯದಲ್ಲಿ ಮೊಬೈಲ್ ಉಪಯೋಗಿಸುವ ಶಿಕ್ಷಕರನ್ನು ಸ್ಥಳದಲ್ಲಿಯೇ ಅಮಾನತುಗೊಳಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಧಿಸೂಚನೆ ಹೊರಡಿಸಬೇಕು’ ಎಂದು ಅವರು ಸೂಚನೆ ನೀಡಿದರು.
‘ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳು ನಡೆಯುವಾಗ ಸಕ್ರಿಯವಾಗಿ ಪರಿಶೀಲನೆ ನಡೆಸಬೇಕು. ಜತೆಗೆ ಕಾಮಗಾರಿಯ ಪೂರ್ಣ ಮಾಹಿ ತಿಯನ್ನು ಸಭೆಗೆ ನೀಡಬೇಕು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಗ್ರಾಮೀಣ ಪ್ರದೇಶದ ಎಲ್ಲ ಫಲಾನುಭವಿಗಳಿಗೂ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದರು.
‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳ ಮುಂಭಾಗ ಗಿಡ-ಗಂಟೆಗಳು ಬೆಳೆದಿವೆ. ಆಸ್ಪತ್ರೆಗಳ ಆವರಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ಎಲ್ಲ ಸಮಯದಲ್ಲೂ ಹುಚ್ಚು ನಾಯಿ ಕಡಿತ ಮತ್ತು ಹಾವು ಕಡಿತದ ಔಷಧಿಗಳು ದೊರೆಯುವಂತೆ ದಾಸ್ತಾನಿಡಬೇಕು.