ಯಲಹಂಕ: ಸರ್ಕಾರಿ ಶಾಲಾ ಆವರಣದಲ್ಲಿ ಸಾಮೂಹಿಕ ಪ್ರಾರ್ಥನಾ ಮಂದಿರದ ಮೇಲ್ಛಾವಣಿ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳಲಾಗುವುದೆಂದು ಶಾಸಕ ಎಸ್.ಆರ್. ವಿಶ್ವನಾಥ್ ತಿಳಿಸಿದರು.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಳೆಗಾಲ ಮತ್ತು ಬಿಸಿಲುಗಾಲದ ಸಂದರ್ಭದಲ್ಲಿ ಮಕ್ಕಳು ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಸ್ಯೆಯಾಗುತ್ತಿರುವ ಕುರಿತು ಉಪಪ್ರಾಂಶುಪಾಲರು ಮಾಡಿದ್ದ ಮನವಿಯ ಹಿನ್ನೆಲೆಯಲ್ಲಿ ಶೀಘ್ರವೇ ಸಾಮೂಹಿಕ ಪ್ರಾರ್ಥನಾ ಮಂದಿರದ ಮೇಲ್ಚಾವಣಿ ನಿರ್ಮಿಸಿಕೊಡಲಾಗುವುದು ಎಂದರು.
ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದರೆ ಖಾಸಗಿ ಶಾಲೆಗಳ ಮಕ್ಕಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿ ತಾಂಶ ತಂದರೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಚಲನಚಿತ್ರ ಹಾಸ್ಯ ಕಲಾವಿದ ಹೊನ್ನವಳ್ಳಿ ಕೃಷ್ಣ ಮಾತನಾಡಿ, ಹಿಂದಿನ ಹಾಗೂ ಇಂದಿನ ಸಾಹಿತ್ಯದಲ್ಲಿ ಇರುವ ಸಾಮಾಜಿಕ ಕಳಕಳಿಯ ಬಗ್ಗೆ ಮನವರಿಕೆ ಮಾಡುವುದರ ಜೊತೆಗೆ ಚಲನಚಿತ್ರಗೀತೆಗಳ ಹಾಸ್ಯಚಟಾಕಿಗಳನ್ನು ಹಾರಿಸಿ ಮಕ್ಕಳನ್ನು ರಂಜಿಸಿದರು.
ವಾರ್ಷಿಕೋತ್ಸವ ಅಂಗವಾಗಿ ವಿಜ್ಞಾನ, ಗಣಿತ, ಕಲೆ, ಸಾಹಿತ್ಯಕ್ಕೆ ಸಂಬಂಧಿಸಿ ವಸ್ತುಪ್ರದರ್ಶನ ಏರ್ಪಡಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಬಿ.ಜಯರಂಗ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್, ಉಪಪ್ರಾಂಶುಪಾಲ ವಿವೇಕಾನಂದ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ಜಿ.ಪ್ರಭು ಸ್ವಾಗತಿಸಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಚನ್ನಕೃಷ್ಣೇಗೌಡ ವಂದಿಸಿದರು.
ಕೊಳೆಗೇರಿ ವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ
ಸರ್ಕಾರಕ್ಕೆ ಪ್ರಸ್ತಾವ
ಕೃಷ್ಣರಾಜಪುರ: `ಕೊಳೆಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ನಡೆದಿದೆ. ಈ ಸಂಬಂಧ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಸಭೆ ಕರೆದಿಲ್ಲ~ ಎಂದು ಶಾಸಕ ಎನ್.ಎಸ್.ನಂದೀಶ ರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.