ಚಿಕ್ಕಬಳ್ಳಾಪುರ: `ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಹತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ಕೈಗೊಳ್ಳದಿರುವುದು ಶೋಚನೀಯ~ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿಷಾದ ವ್ಯಕ್ತಪಡಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ನಡೆದ ಧರಣಿಯಲ್ಲಿ ಮಾತನಾಡಿದ ಅವರು, `ಜಿಲ್ಲೆಯ ಜನರಿಗೆ ನೀರಿನ ಅವಶ್ಯಕತೆಯಿದ್ದು, ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು. ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಬೇಕು~ ಎಂದರು.
`ನದಿಮೂಲಗಳನ್ನು ಇಲ್ಲದ ಚಿಕ್ಕಬಳ್ಳಾಪುರ ಜಿಲ್ಲೆಯು ಬರಪೀಡಿತ ಪ್ರದೇಶವಾಗಿದ್ದು, ಅಂತರ್ಜಲ ಬತ್ತುತ್ತಿದೆ. ಸಾವಿರ ಅಡಿಗಳಷ್ಟು ಕೊರೆದರೂ ಒಂದು ಹನಿ ನೀರು ಸಿಗುತ್ತಿಲ್ಲ. ಕೊಳವೆಬಾವಿಗಳು ಬತ್ತುತ್ತಿದ್ದು, ರೈತರು ಕೃಷಿ ಚಟುವಟಿಕೆ ಮಾಡಲಾಗದಂತಹ ಪರಿಸ್ಥಿತಿಯಿದೆ~ ಎಂದು ಅವರು ಹೇಳಿದರು.
`ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಯಲ್ಲಿ ಸರ್ಕಾರವು ಪ್ರಮುಖ ಪಾತ್ರವಹಿಸಬೇಕು. ಅಕ್ರಮ ಗಣಿಗಾರಿಕೆ, ನೈಸರ್ಗಿಕ ಸಂಪನ್ಮೂಲಗಳ ಲೂಟಿ ಮಾಡುತ್ತಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದಕೊಳ್ಳಬೇಕು. ನೈಸರ್ಗಿಕ ಸಂಪತ್ತು ಉಳಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು~ ಎಂದರು. ಕಮ್ಯುನಿಸ್ಟ್ ಮುಖಂಡ ಲಕ್ಷ್ಮಯ್ಯ, ನಿವೃತ್ತ ಮುಖ್ಯಶಿಕ್ಷಕ ಚಿಕ್ಕರಾಮು ಮುಂತಾದವರು ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಮಹಿಳಾ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.