ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ಸೋಮವಾರ ಆದೇಶಿಸಿದೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ 156 (3) ಕಲಮಿನ ಅಡಿ ತನಿಖೆ ನಡೆಸುವಂತೆ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೊದಲು ಎಫ್ಐಆರ್ ದಾಖಲಿಸಿ ನಂತರ ತನಿಖೆ ನಡೆಸಬೇಕಿದೆ. ಫೆ. 18ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಆದೇಶಿಸಿದ್ದಾರೆ.
ರಾಜಾಜಿನಗರ ನಿವಾಸಿ ಎಚ್. ಸಿ.ಪ್ರಕಾಶ್ ಸಲ್ಲಿಸಿರುವ ಖಾಸಗಿ ದೂರು ಇದಾಗಿದೆ. ಕೃಷ್ಣಪ್ಪ, ಅವರ ಪುತ್ರ ಹಾಗೂ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಪತ್ನಿ ಪ್ರಿಯದರ್ಶಿನಿ ಹಾಗೂ ಪುತ್ರ ಪ್ರದೀಪ್ ಇತರ ಆರೋಪಿಗಳು. ಇವರ ವಿರುದ್ಧವೂ ತನಿಖೆಗೆ ಆದೇಶಿಸಲಾಗಿದೆ.