ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಮಂಜು ಜೆಡಿಎಸ್ ಏಜೆಂಟ್: ಆರೋಪ

Last Updated 3 ಸೆಪ್ಟೆಂಬರ್ 2013, 6:25 IST
ಅಕ್ಷರ ಗಾತ್ರ

ಹಾಸನ: `ಅರಕಲಗೂಡು ಶಾಸಕ ಎ. ಮಂಜು ಜೆ.ಡಿ.ಎಸ್. ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ' ಎಂದು ಅವರದೇ ಪಕ್ಷ(ಕಾಂಗ್ರೆಸ್)ದ ರಾಜ್ಯ ಕಾರ್ಯಕಾರಿ ಸಮಿತಿ ಮಾಜಿ ಸದಸ್ಯ ಎಚ್.ಆರ್. ನಾರಾಯಣ್ ಆರೋಪಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಅವರು, `ಆಗಸ್ಟ್ 31 ರಂದು ಹೊಳೆನರಸೀಪುರ ತಾಲ್ಲೂಕಿನ ಬೆಟ್ಟದಗುಳದಪುರದಲ್ಲಿ ನಡೆದ ವಿವಿಧ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೂ ಮಾಹಿತಿ ನೀಡಿರಲಿಲ್ಲ. ಅಲ್ಲದೇ ಕಾರ್ಯಕ್ರಮ ನಡೆದ ಗ್ರಾಮ ಅರಕಲಗೂಡು ಕ್ಷೇತ್ರಕ್ಕೆ ಸೇರುತ್ತದೆ. ಈ ಗ್ರಾಮ ಎಚ್.ಡಿ. ರೇವಣ್ಣ ಅವರ ವ್ಯಾಪ್ತಿಗೆ ಬರದಿದ್ದರೂ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರನ್ನು ಹಾಗೂ ರೇವಣ್ಣ ಅವರನ್ನು ಕರೆತಂದು ಕಾರ್ಯಕ್ರಮ ನಡೆಸಿದ್ದಾರೆ ಎಂದರು.

`ಹಿಂದಿನಿಂದಲೂ ಮಂಜು ಅವರು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಸಹಾಯ ನೀಡುತ್ತಾ ಬಂದಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಯಲ್ಲೂ ಹೊಳೆನರಸೀಪುರ ಕ್ಷೇತ್ರದಲ್ಲಿ ಶಾಸಕ ರೇವಣ್ಣ ಅವರ ಗೆಲುವಿಗೆ ಸಹಕಾರ ನೀಡಿದ್ದಾರೆ. ಮಂಜು ಅವರ ನಿಲುವಿನಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಎಂದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ದೂರು ನೀಡಲಾಗುವುದು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಮಂಜು ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು' ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡ ಮಂಜೇಗೌಡ, ಸ್ವಾಮೀಗೌಡ, ನಂಜೇಗೌಡ ಹಾಗೂ ನಂಜುಂಡೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT