ನವದೆಹಲಿ (ಪಿಟಿಐ): ಕರ್ನಾಟಕ ವಿಧಾನಸಭೆಯ ಐವರು ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ಕ್ರಮ ಅಂತಿಮವಲ್ಲ, ಅದು ನ್ಯಾಯಾಂಗ ಪರಿಶೀಲನೆಗೆ ಮುಕ್ತವಾಗಿದೆ ಎಂದು ಸುಪ್ರೀಂಕೋರ್ಟ್ ಬುಧವಾರ ತೀರ್ಪು ನೀಡಿದೆ.
ಈ ಐತಿಹಾಸಿಕ ತೀರ್ಪು ನೀಡಿರುವ ನ್ಯಾಯಮೂರ್ತಿಗಳಾದ ಸಿರಿಯಾಕ್ ಜೋಸೆಫ್ ಮತ್ತು ಅಲ್ತಮಸ್ ಕಬೀರ್ ಅವರನ್ನು ಒಳಗೊಂಡ ನ್ಯಾಯಪೀಠ, ಸ್ಪೀಕರ್ ಕ್ರಮವನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದೆ.
ಕಳೆದ ಅಕ್ಟೋಬರ್ನಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸುವುದಕ್ಕೂ ಮುನ್ನಾ ದಿನ ಸ್ಪೀಕರ್ ಐವರು ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಪಕ್ಷೇತರ ಶಾಸಕರಾದ ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಪಿ.ಎಂ.ನರೇಂದ್ರ ಸ್ವಾಮಿ, ಡಿ.ಸುಧಾಕರ್ ಮತ್ತು ಶಿವರಾಜ್ ತಂಗಡಗಿ ಅವರು ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಸ್ಪೀಕರ್ ಕೆ.ಜಿ.ಬೋಪಯ್ಯ ಅವರು 2010ರ ಅಕ್ಟೋಬರ್ 10ರಂದು ಬಿಜೆಪಿ ಸರ್ಕಾರದ ವಿಶ್ವಾಸಮತ ಯಾಚನೆಯ ಮುನ್ನಾ ದಿನ ಶಾಸಕರನ್ನು ಅನರ್ಹಗೊಳಿಸಿದ್ದರು. ಬಿಜೆಪಿಯ 11 ಶಾಸಕರ ಅನರ್ಹತೆ ಪ್ರಕರಣದಲ್ಲೂ ಸುಪ್ರಿಂಕೋರ್ಟ್ ಕಳೆದ ಮೇ 13ರಂದು ಇದೇ ರೀತಿಯ ತೀರ್ಪು ನೀಡಿತ್ತು.