ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರು ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಯಲ್ಲಾಪುರದ ಕಾಂಗ್ರೆಸ್ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಅವರ ಮಗ ವಿವೇಕ ಹೆಬ್ಬಾರ್ ಮತ್ತು ಸಂಬಂಧಿ ಪ್ರಕಾಶ ಹೆಗಡೆ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ.
ವಿವೇಕ ಅವರು ಯಲ್ಲಾಪುರದ ಡ್ರೀಮ್ ಲಾಜಿಸ್ಟಿಕ್ಸ್ ಕಂಪೆನಿಯ ಮಾಲೀಕರು. ಸುಪ್ರೀಂಕೋರ್ಟ್ ಆದೇಶದಂತೆ ಈ ಕಂಪೆನಿಯ ವಿರುದ್ಧ ಪ್ರಕರಣ ದಾಖಲಿಸಿದ್ದ ಸಿಬಿಐ ತನಿಖೆ ನಡೆಸಿ ನ. 30ರಂದು ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.
ಪ್ರಕರಣದ ತನಿಖೆ ಮುಂದುವರಿಸಿದ ಸಿಬಿಐ ಅಧಿಕಾರಿಗಳು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ವಿವೇಕ ಮತ್ತು ಪ್ರಕಾಶ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಅಲ್ಲಿಗೆ ಬಂದ ಇಬ್ಬರನ್ನೂ ಬಂಧಿಸಲಾಯಿತು. 2009ರ ಜನವರಿ 1ರಿಂದ 2010ರ ಮೇ 31ರ ಅವಧಿಯಲ್ಲಿ ಡ್ರೀಮ್ ಲಾಜಿಸ್ಟಿಕ್ಸ್ ಬೇಲೆಕೇರಿ ಬಂದರಿನ ಮೂಲಕ 9 ಲಕ್ಷ ಟನ್ ಕಬ್ಬಿಣದ ಅದಿರನ್ನು ರಫ್ತು ಮಾಡಿತ್ತು.