ದೇವನಹಳ್ಳಿ: ಗ್ರಾಮಗಳ ಮೂಲಸೌಲಭ್ಯಗಳ ಸಮಸ್ಯೆ ಬಗೆಹರಿಸಲು ಹಮ್ಮಿಕೊಳ್ಳುವ ಜನ ಸಂಪರ್ಕ ಸಭೆಗಳಲ್ಲಿ ಶಾಸಕರು ಪಾಲ್ಗೊಳ್ಳದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಕೆ.ಶಿವಪ್ಪ ಆರೋಪಿಸಿದರು.
ತಾಲ್ಲೂಕಿನ ಬನ್ನಿಮಂಗಲದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಶನಿವಾರ ಏರ್ಪಡಿಸಿದ್ದ ಜನಸ್ಪಂದನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಜನಸ್ಪಂದನಾ ಸಭೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ. ಜನಪ್ರತಿನಿಧಿಗಳು ಹಾಗೂ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಜನರ ಸಮಸ್ಯೆಯನ್ನು ಅರಿತು ಪರಿಹರಿಸಲು ಪ್ರಯತ್ನಿಸಬೇಕು. ಆದರೆ ಸಭೆಯ ಬಗ್ಗೆ ಗ್ರಾ.ಪಂ ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಸರ್ಕಾರಕ್ಕೆ ವರದಿ ನೀಡಲು ಮಾತ್ರ ಕಾರ್ಯಕ್ರಮ ನಡೆಸಲಾಗುತ್ತಿದೆ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯಿತಿಗಳು ಸಭೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.
ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಟಿ.ನಾಗೇಶ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದೆ. ನಿವೇಶನ ರಹಿತರ ಆಯ್ಕೆ ಪಟ್ಟಿಯನ್ನು ಸಲ್ಲಿಸಲಾಗಿದೆ. ಶಾಸಕರು ಕಾರ್ಯ ನಿಮಿತ್ತ ಗೈರು ಹಾಜರಾಗಿದ್ದಾರೆ. ತಾಲ್ಲೂಲಿನ ಎಲ್ಲಾ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆ ಬಗ್ಗೆ ಮುಕ್ತವಾಗಿ ಚರ್ಚಿಸಿ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಜಿ.ಪಂ.ಸದಸ್ಯೆ ಸವಿತಾ ವೆಂಕಟಸ್ವಾಮಿ ಮಾತನಾಡಿದರು. ತಾ.ಪಂ. ಸದಸ್ಯ ಪಟಾಲಪ್ಪ, ಗ್ರಾ.ಪಂ.ಉಪಾಧ್ಯಕ್ಷೆ ಕವಿತಾ ಶ್ರಿನಿವಾಸ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಆಂಜಿನಪ್ಪ, ಆಹಾರ ಇಲಾಖೆ ಶಿರಸ್ತೆದಾರ್ ಕೃಷ್ಣಮೂರ್ತಿ, ಗ್ರಾ.ಪಂ.ಸದಸ್ಯರು ಇದ್ದರು.