ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರು ಜ್ಞಾನ ವೃದ್ಧಿಸಿಕೊಳ್ಳಲು ಸಲಹೆ

Last Updated 20 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಇಂದಿನ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಅಗಾಧವಾಗಿದೆ. ಹಾಗಾಗಿ ಶಿಕ್ಷಕರು ಕಾಲ- ಕಾಲಕ್ಕೆ ತಮ್ಮ ಜ್ಞಾನ ವೃದ್ಧಿಸಿಕೊಳ್ಳಲು ಗಮನ ಹರಿಸಬೇಕು~ ಎಂದು ಸಚಿವ ಆರ್. ಅಶೋಕ ಹೇಳಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಗರದ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚಣೆ ಹಾಗೂ ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರಿಯಾಶೀಲ ಆಡಳಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಮಕ್ಕಳು ಎಲ್ಲವನ್ನು ಬಹಳ ಬೇಗ ಗ್ರಹಿಸುತ್ತಾರೆ. ಹಾಗಾಗಿ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಂತಹ ಮಹಾನ್ ವ್ಯಕ್ತಿಗಳ ಜೀವನ ಹಾಗೂ ಸಾಧನೆಯ ಬಗ್ಗೆ ತಿಳಿಸಬೇಕು. ಅವರ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು~ ಎಂದರು.

`ಮಾಜಿ ರಾಷ್ಟ್ರಪತಿ ಎಸ್. ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ ಐದರಂದು ಶಿಕ್ಷಕರ ದಿನ ಆಚರಿಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ. ಆದರೆ ಕೆಲ ಶಿಕ್ಷಕರು ಆ ದಿನವೇ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದು ಸರಿಯಲ್ಲ. ಅದು ಶಿಕ್ಷಕ ವೃತ್ತಿ ಹಾಗೂ ಸಮಾಜಕ್ಕೆ ಅಗೌರವ ತೋರಿದಂತಾಗಿದೆ~ ಎಂದು ಬೇಸರ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ, `ನೆರೆಯ ರಾಜ್ಯಗಳು ಹಾಗೂ ಕರ್ನಾಟಕಕ್ಕೆ ಹೋಲಿಸಿದರೆ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ನೀಡಿಕೆಯಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಇದನ್ನು ಸರಿಪಡಿಸಲು ವೇತನ ಶಿಫಾರಸು ಅಧ್ಯಯನ ಸಮಿತಿಯು 6ನೇ ವೇತನ ಆಯೋಗಕ್ಕೆ ಸಮಗ್ರ ವರದಿ ಸಲ್ಲಿಸಬೇಕು~ ಎಂದು ಅವರು   ಒತ್ತಾಯಿಸಿದರು.

`ಮಧ್ಯಂತರ ಪರಿಹಾರ ನೀಡುವ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಶೇ 40ರಷ್ಟು ಪರಿಹಾರ ಧನ ನೀಡಬೇಕು. ಶಿಕ್ಷಕರ ಸೇವಾವಧಿಗೆ ಅನುಗುಣವಾಗಿ ಮುಂಬಡ್ತಿ ನೀಡಬೇಕು. ನಲಿ- ಕಲಿ ಯೋಜನೆಯನ್ನು ಒಂದರಿಂದ ಎರಡನೇ ತರಗತಿಗೆ ಸೀಮಿತಗೊಳಿಸಬೇಕು ಮತ್ತು 3ನೇ ತರಗತಿಗೆ ವಿಸ್ತರಿಸುವುದನ್ನು ಕೈಬಿಡಬೇಕು~ ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಎಂ. ನಾರಾಯಣಸ್ವಾಮಿ, ಬೆಂಗಳೂರು ದಕ್ಷಿಣ ವಲಯ-1ರ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ, ಪಾಲಿಕೆ ಸದಸ್ಯ ಎಚ್. ನಾರಾಯಣ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT