ಬೆಂಗಳೂರು: ರಾಜ್ಯದಲ್ಲಿನ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಸಕ್ತ ಬಜೆಟ್ನಲ್ಲಿ ಶಿಕ್ಷಣಕ್ಕೆ ಶೇ 30ರಷ್ಟು ಅನುದಾನವನ್ನು ಮೀಸಲಿಡಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸದಸ್ಯರು ನಗರದ ಚಿಕ್ಕಲಾಲ್ಬಾಗ್ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಗುರುವಾರ ಪ್ರತಿಭಟನಾ ರ್ಯಾಲಿ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ, ‘ಪ್ರತಿ ವರ್ಷವೂ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರವನ್ನು ಪರಿಗಣಿಸುತ್ತಲೇ ಇಲ್ಲ. ಇದರಿಂದಾಗಿ ರಾಜ್ಯದ ಸರ್ಕಾರಿ ಶಾಲಾ, ಕಾಲೇಜುಗಳ ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.
‘ಶುಲ್ಕ ಏರಿಕೆಯನ್ನು ನಿಲ್ಲಿಸಿ, ಶುಲ್ಕ ಏರಿಕೆ ಮಾಡುವುದಿಲ್ಲ ಎಂಬ ಘೋಷಣೆ ಹೊರಡಿಸಬೇಕು. ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಿ, ಕೂಡಲೇ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು. 2010-11ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಕ್ಷಣ ಬಿಡುಗಡೆಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.ಸ್ಥಳಕ್ಕೆ ಆಗಮಿಸಿದ ಸಚಿವ ಎ.ನಾರಾಯಣಸ್ವಾಮಿ ಅವರು ಮನವಿ ಸ್ವೀಕರಿಸಿ ‘ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಅನುದಾನ ಮೀಸಲಿಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.