ಶ್ರೀನಿವಾಸಪುರ: ಸಮಾಜದಲ್ಲಿನ ಬಡ ಕುಟುಂಬಗಳಿಗೆ ಸೇರಿದ ರೋಗಿಗಳ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏಪರ್ಡಿಸಲಾಗುತ್ತಿದೆ ಎಂದು ಡಾ.ರಮೇಶ್ ಲಕ್ಷ್ಮೀಕಾಂತ್ ಹೇಳಿದರು.
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆ, ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಸ್ಥಳೀಯ ಗಣಪತಿ ಆರ್ಯವೈಶ್ಯ ಯುವಕ ಸಂಘದ ವತಿಯಿಂದ ಈಚೆಗೆ ಏರ್ಪಡಿಸಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಆರೋಗ್ಯ ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಶಿಬಿರದಲ್ಲಿ ಆಯ್ಕೆಯಾದ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಸೇವಾ ಮನೋಭಾವದಿಂದ ಈ ಕೆಲಸ ಮಾಡಲಾಗುತ್ತಿದೆ. ವಿದ್ಯಾವಂತ ಯುವ ಸಮುದಾಯ ಇಂಥ ಶಿಬಿರಗಳ ಬಗ್ಗೆ ಸಾರ್ವಜನಿಕರ ಗಮನ ಸೆಳೆಯಬೇಕು. ಅರ್ಹರನ್ನು ಕರೆತಂದು ರೋಗಿ ತಪಾಸಣೆಗೆ ನೆರವಾಗಬೇಕು ಎಂದರು.
ಶಿಬಿರದಲ್ಲಿ 300ಕ್ಕೂ ಹೆಚ್ಚು ರೋಗಿಗಳು ಆರೋಗ್ಯ ತಪಾಸಣೆಗೆ ಒಳಗಾದರು. ರೋಗಿಗಳಿಗೆ ಅಗತ್ಯವಾದ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.