ಎನ್ಎಸ್ಯುಐ ಕಾರ್ಯಕರ್ತರು ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿ, ನಂತರ ತರಗತಿಗಳನ್ನು ನಡೆಸದಂತೆ ಪ್ರಾಧ್ಯಾಪಕರಿಗೆ ಮನವಿ ಮಾಡಿದರು.ತದನಂತರ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ವಿವಿ ಮುಂಭಾಗದ ಗೇಟ್ನಲ್ಲಿ ಕೆಲಕಾಲ ಧರಣಿ ನಡೆಸಿ, ಕುಲಪತಿ ಪ್ರೊ.ಎಸ್.ಎ. ಬಾರಿ ಅವರಿಗೆ ಮನವಿ ಮಾಡಿದರು.
ಸಾಕಷ್ಟು ಯುವಕರು ಸ್ನಾತಕೋತ್ತರ ಪದವಿ ಮುಗಿಸಿ, ಕೆಲಸ ಸಿಗದೆ ನಿರುದ್ಯೋಗಿಗಳಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ಉಪನ್ಯಾಸಕರ ಹುದ್ದೆಗೆ ನೇಮಕ ಮಾಡಿಕೊಳ್ಳುವಾಗ ಶೇ. 50ರಷ್ಟು ಸೀಟುಗಳನ್ನು ಪ್ರೌಢಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಿ ತುಂಬಿಸಿಕೊಳ್ಳಲು ಸರ್ಕಾರ ಹೊರಟಿದೆ. ಇದು ಅವೈಜ್ಞಾನಿಕವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.