ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರವು ವಾಲ್ಮೀಕಿ ಸಮುದಾಯದ ಜತೆ ಎಲ್ಲ ಸಮುದಾಯಗಳ ಬಗ್ಗೆ ವಿಶೇಷ ಕಳಕಳಿ ಹೊಂದಿದೆ. ಜಿಲ್ಲೆಯಲ್ಲಿ ಶೀಘ್ರವೇ ₨ 8 ಕೋಟಿ ವೆಚ್ಚದ ವಾಲ್ಮೀಕಿ ವಸತಿ ಶಾಲೆಯೊಂದನ್ನು ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಭರವಸೆ ನೀಡಿದರು.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಸಮಿತಿಯು ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿ, ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರು ಸೂಕ್ತವಾದ ನಿವೇಶನ ಕಲ್ಪಿಸಿಕೊಟ್ಟಲ್ಲಿ ಶೀಘ್ರವೇ 6 ರಿಂದ 10ನೇ ತರಗತಿಯವರೆಗಿನ ವಸತಿ ಶಾಲೆಯನ್ನು ಆರಂಭಿಸಲಾಗುವುದು ಎಂದರು.
ವಸತಿ ಶಾಲೆಯಲ್ಲದೇ ಮುಖ್ಯಮಂತ್ರಿ 30 ಜಿಲ್ಲೆಯಲ್ಲೂ ಒಂದೊಂದು ವಾಲ್ಮೀಕಿ ಭವನ ನಿರ್ಮಿಸುವ ಭರವಸೆ ನೀಡಿದ್ದು, ಇದಕ್ಕೆ ಪೂರಕವಾಗಿ ಜಿಲ್ಲಾ ಕೇಂದ್ರದಲ್ಲಿ ಸುಮಾರು ₨ 2 ರಿಂದ 3 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಸಲಾಗುವುದು. ತಾಲ್ಲೂಕು ಕೇಂದ್ರಗಳಲ್ಲೂ ಸಹ ₨ 1 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದೆಲ್ಲದಕ್ಕೂ ನಮಗೆ ಸಕಾಲದಲ್ಲಿ ನಿವೇಶನ ದೊರೆಯಬೇಕಿದೆ ಎಂದು ತಿಳಿಸಿದರು.
ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯ ಸರ್ಕಾರವು ಎಲ್ಲ ಸಮುದಾಯಗಳ ಏಳಿಗೆಗಾಗಿ ನೂತನ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದೆ, ವಾಲ್ಮೀಕಿ ಸಮುದಾಯದ ತಳವಾರ ಮತ್ತು ಪರಿವಾರ ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಬೇಡಿಕೆ ಕೇಳಿ ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಜಿಲ್ಲಾ ಕೇಂದ್ರದ ಪ್ರಮಖ ಸ್ಥಳದ ಬಳಿ ನಿವೇಶನವೊಂದನ್ನು ಸ್ವಾಧೀನಪಡಿಸಿಕೊಂಡು ವಾಲ್ಮೀಕಿ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.
ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ವಿ.ಎಸ್.ಉಗ್ರಪ್ಪ ಮಾತನಾಡಿ, ಸ್ವಾತಂತ್ರ ಸಂಗ್ರಾಮದಲ್ಲಿ ಹುತಾತ್ಮರಾದ ಮುಧೋಳದ ಹಲಗಲಿ ಬೇಡರ ಸಮಾಧಿ ಅಭಿವೃದ್ಧಿಗೆ ರಾಜ್ಯ ಸರ್ಕಾರ ₨ 5 ಕೋಟಿ ಬಿಡುಗಡೆ ಮಾಡಬೇಕು. ರಾಜನಹಳ್ಳಿ ವಾಲ್ಮೀಕಿ ಪೀಠಕ್ಕೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜು ಆರಂಭಿಸಲು ಅವಕಾಶ ನೀಡಬೇಕು. ನಾಲ್ಕನೇ ದೊಡ್ಡ ಜಾತಿಯಾಗಿರುವ ನಾಯಕ ಸಮುದಾಯದ ಏಳ್ಗೆಗೆ ಅನುದಾನ ಬಿಡುಗಡೆ ಮಾಡಬೇಕು ಎಂದರು.
ರಾಜನಹಳ್ಳಿ ವಾಲ್ಮೀಕಿ ಪೀಠದ ಮಠಾಧೀಶ ಪ್ರಸನ್ನಾನಂದ ಸ್ವಾಮೀಜಿ, ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರ ರೆಡ್ಡಿ, ಶಾಸಕರಾದ ಡಾ. ಕೆ.ಸುಧಾಕರ್, ಎಂ.ರಾಜಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ, ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಸಮಿತಿ ಮುಖಂಡರಾದ ಬಂಕ್ ಮುನಿಯಪ್ಪ, ಕೆ.ಟಿ.ನಾರಾಯಣಸ್ವಾಮಿ, ಪಿ.ಮುನಿರಾಜು, ಎನ್.ಸುಬ್ಬರಾಯಪ್ಪ, ಕೆ.ವಿ.ಗವಿರಾಯಪ್ಪ, ಎಸ್.ಎನ್.ಅಶ್ವತ್ಥನಾರಾಯಣ, ಎನ್.ನಾಗಪ್ಪ, ನರಸಿಂಹಮೂರ್ತಿ, ಆವಲಕೊಂಡರಾಯಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.