ಬೆಂಗಳೂರು: `ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನವಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಕೈಕಟ್ಟಿ ಕುಳಿತಿದೆ. ಸಮಸ್ಯೆ ಹೀಗೆಯೇ ಮುಂದುವರಿದರೆ ನಗರದಿಂದ ತಿಪ್ಪಗೊಂಡನಹಳ್ಳಿ ಜಲಾಶಯದವರೆಗೆ ಪಾದಯಾತ್ರೆ ನಡೆಸಲಾಗುವುದು~ ಎಂದು ಶಾಸಕ ನೆ.ಲ.ನರೇಂದ್ರಬಾಬು ಎಚ್ಚರಿಕೆ ನೀಡಿದ್ದಾರೆ.
`ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ವಿಜಯದಶಮಿ ನಂತರ ಸ್ಥಳ ಸಮೀಕ್ಷೆ ನಡೆಸಲಾಗುವುದು ಎಂದು ಬೆಂಗಳೂರು ಜಲಮಂಡಲಿ ಸಚಿವರು ತಿಳಿಸಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನೆರಡು ದಿನ ಕಳೆದು ಪಾದಯಾತ್ರೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು~ ಎಂದರು.
`ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನವಾಗಿರುವ ಬಗ್ಗೆ ಕೇಂದ್ರ ಪರಿಸರ ಸಚಿರಿಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ~ ಎಂದು ತಿಳಿಸಿದರು.
ಜಲಮಂಡಲಿ ಪ್ರತಿಕ್ರಿಯೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಯೊಬ್ಬರು `ಯಾವುದೇ ಜಲಾಶಯಕ್ಕೆ ಹರಿದು ಬರುವ ನೀರು ಶುದ್ಧವಾಗಿರುವುದಿಲ್ಲ. ಅದನ್ನು ಸಂಸ್ಕರಿಸಿದ ನಂತರವಷ್ಟೇ ಕುಡಿಯಲು ಯೋಗ್ಯವಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಪ್ರತಿದಿನ ನೀರಿನ ಪರೀಕ್ಷೆ ನಡೆಸಲಾಗುತ್ತದೆ. ನಗರದ ಜನತೆಗೆ ಪೂರೈಸುತ್ತಿರುವ ನೀರು ಯಾವುದೇ ರೀತಿಯಲ್ಲಿ ಕಲುಷಿತವಾಗಿಲ್ಲ~ ಎಂದು ತಿಳಿಸಿದರು.