ಮಡಿಕೇರಿ: ಕೊಡಗು ಜಿಲ್ಲೆಗೆ ಮಾರಕವಾಗಿರುವ ಪರಿಸರ ಸೂಕ್ಷ್ಮ ವಲಯ ಯೋಜನೆಯನ್ನು ಕೈಬಿಡುವಂತೆ ಹಾಗೂ ಈ ಬಗ್ಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ರಾಜ್ಯದ ಮುಖ್ಯಮಂತ್ರಿಗಳನ್ನು ಒತ್ತಾಯಿಸಲು ಜಿಲ್ಲಾ ಬಿಜೆಪಿ ವತಿಯಿಂದ ನಿಯೋಗವೊಂದು ಶೀಘ್ರದಲ್ಲಿಯೇ ಬೆಂಗಳೂರಿಗೆ ತೆರಳಲಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಡಿ.ಮಂಜುನಾಥ್ ತಿಳಿಸಿದರು.
ನಗರದಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ವಿಧಾನಸಭಾಧ್ಯಕ್ಷ ಕೆ.ಜಿ ಬೋಪಯ್ಯ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದಾಗ ಕೊಡಗಿನ ಜನತೆಯ ಹಿತಕ್ಕೆ ಮಾರಕವಾಗುವ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸುವುದಿಲ್ಲ ಎಂಬ ಭರವಸೆಯನ್ನು ಮುಖ್ಯಮಂತ್ರಿಗಳೂ ನೀಡಿದ್ದಾರೆ ಎಂದು ಹೇಳಿದರು.
ಪರಿಸರ ಸೂಕ್ಷ್ಮ ವಲಯ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ತಾನು ಎಲ್ಲೂ ಹೇಳಿಕೆ ನೀಡಿಲ್ಲ ಎಂದು ಅರಣ್ಯ ಸಚಿವರೂ ಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದು ವಿವರಿಸಿದರು.
ಕೊಡಗಿನ ಜಮ್ಮೋ ಬಾಣೆ ಸಮಸ್ಯೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಪರಿಹರಿಸುವುದಾಗಿ ಕಂದಾಯ ಇಲಾಖೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ನುಡಿದರು.
ಪಕ್ಷದ ವಕ್ತಾರ ಮನುಮುತ್ತಪ್ಪ ಮಾತನಾಡಿ, ಮೇಲಿಂದ ಮೇಲೆ ತೈಲ ಬೆಲೆ ಹೆಚ್ಚಿಸುತ್ತಿರುವ ಕೇಂದ್ರಸರ್ಕಾರದ ಕ್ರಮವನ್ನು ಅವರು ಖಂಡಿಸಿದರು. ಕೇಂದ್ರ ಸರಕಾರ ತೈಲ ಕಂಪೆನಿಗಳ ಮೇಲೆ ಹಿಡಿತ ಕಳೆದುಕೊಂಡಿದ್ದು, ಇದೀಗ ತೈಲ ಕಂಪೆನಿಗಳೇ ಸರಕಾರದ ಮೇಲೆ ಹಿಡಿತ ಸಾಧಿಸುತ್ತಿವೆ ಎಂದು ವ್ಯಂಗ್ಯವಾಡಿದರು. ಮಡಿಕೇರಿ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಎಂ.ಎನ್ .ಕೊಮಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.