ನವದೆಹಲಿ (ಪಿಟಿಐ): ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಾಹೀರಾತಿಗಾಗಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಳೆದ ವಾರ ಲೋಕಾಯುಕ್ತರು ಆರೋಪಿಸಿದ ಬೆನ್ನಲ್ಲೇ, ದೀಕ್ಷಿತ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.
ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಕೆಲವು ಸಚಿವರು, ದೆಹಲಿ ಸರ್ಕಾರದ ಜಾಹೀರಾತು ಮತ್ತು ಪ್ರಚಾರ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ವಿವೇಕ ಗರ್ಗ್ ದೂರು ದಾಖಲಿಸಿದ್ದಾರೆ. ಈ ಕುರಿತ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಲಾಗಿದೆ.
2008ರ ದೆಹಲಿ ಚುನಾವಣೆ ಸಂದರ್ಭದಲ್ಲಿ ಶೀಲಾ ದೀಕ್ಷಿತ್ ಅವರು ಲಾಭ ಪಡೆಯಲು ಸರ್ಕಾರದ ಹಣವನ್ನು ಜಾಹೀರಾತಿಗಾಗಿ ಬಳಸಿಕೊಂಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರು ನಡೆಸಿದ ತನಿಖೆಯೇ ಮುಖ್ಯ ಸಾಕ್ಷಿ ಎಂದು ದೂರಿನಲ್ಲಿ ಹೇಳಿದ್ದಾರೆ.