ಯಾದಗಿರಿ: ತಮ್ಮ ಪರಿಸರದಲ್ಲಿ ನಡೆಯುವ ನ್ಯಾಯ, ಅನ್ಯಾಯಗಳನ್ನು ಗುರುತಿಸಿ ಅವುಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಮಕ್ಕಳ ಗ್ರಾಮಸಭೆಗಳನ್ನು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಆಯೋಜಿಸಲಾಗುತ್ತದೆ. ಮಕ್ಕಳ ಗ್ರಾಮಸಭೆಯು ಮಕ್ಕಳಿಗೆ ತಮ್ಮ ಸಂರಕ್ಷಣೆಯ, ಸವಲತ್ತಿನ ಹಕ್ಕು ಪ್ರತಿಪಾದಿಸಲು ಹಾಗೂ ಕುಂದುಕೊರತೆಗಳನ್ನು ಹೇಳಿಕೊಳ್ಳುವ ವೇದಿಕೆ ಒದಗಿಸುತ್ತದೆ. ಆದರೆ ಯಾದಗಿರಿ ಜಿಲ್ಲೆಯಲ್ಲಿ ಮಾತ್ರ ಇದುವರೆಗೆ ಒಂದೇ ಒಂದು ಮಕ್ಕಳ ಗ್ರಾಮಸಭೆ ನಡೆದಿಲ್ಲ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಮಕ್ಕಳ ಹಕ್ಕುಗಳ ಮಾಸಾಚರಣೆ ಹಮ್ಮಿಕೊಳ್ಳಬೇಕು. ಈ ತಿಂಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಗ್ರಾಮಸಭೆ ನಡೆಸುವಂತೆ 2006 ರಲ್ಲಿಯೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಈ ಗ್ರಾಮಸಭೆಗಳ ರೂಪುರೇಷೆ, ಅವುಗಳಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆಯೂ ಮಾರ್ಗಸೂಚಿ ನೀಡಿದೆ. ಆದರೆ ಜಿಲ್ಲೆಯಲ್ಲಿ ಇದುವರೆಗೂ ಮಕ್ಕಳ ಗ್ರಾಮಸಭೆಗಳ ಬಗ್ಗೆ ಬಹುತೇಕ ಜನರಿಗೆ ತಿಳಿದೇ ಇಲ್ಲ.
ಸಭೆಯ ಉದ್ದೇಶ: ಮಕ್ಕಳ ಗ್ರಾಮಸಭೆಯ ಮೂಲಕ ಮಕ್ಕಳ ಸಮಸ್ಯೆಗಳು ಮತ್ತು ಅವುಗಳ ಪರಿಹಾರದ ಬಗ್ಗೆ ಚರ್ಚಿಸಲಾಗುತ್ತದೆ. ಮಕ್ಕಳಿಗೆ ಸಂಬಂಧಪಟ್ಟ ಮಾಹಿತಿ, ಸಮಸ್ಯೆಗಳನ್ನು ಮಕ್ಕಳಿಂದಲೇ ತಿಳಿದುಕೊಳ್ಳುವುದು ಗ್ರಾಮಸಭೆಯ ಉದ್ದೇಶ.
ಸರ್ಕಾರದ ವಿವಿಧ ಇಲಾಖೆಗಳು ಮಕ್ಕಳ ಬಗ್ಗೆ ಅನುಷ್ಠಾನಗೊಳಿಸುವ ವಿವಿಧ ಕಾರ್ಯಕ್ರಮಗಳನ್ನು ಮಕ್ಕಳಿಗೆ ಪರಿಚಯಿಸುವುದು, ಮಕ್ಕಳು ಸಂಘಟಿತರಾಗಿ ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಂಡು, ಎಲ್ಲ ಹಕ್ಕುಗಳನ್ನು ಬಳಸಿಕೊಳ್ಳಲು ಜಾಗೃತಿ ಉಂಟು ಮಾಡುವುದು, ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯ ಹಿರಿಯರೊಂದಿಗೆ ಹಂಚಿಕೊಳ್ಳಲು ಹಾಗೂ ಚರ್ಚೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು, ವಯಸ್ಕರಾದಾಗ ಗ್ರಾಮಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಬಾಲ್ಯದಿಂದಲೇ ತಯಾರಿ ಮಾಡುವುದು ಮಕ್ಕಳ ಗ್ರಾಮಸಭೆಯ ಉದ್ದೇಶಗಳಾಗಿವೆ.
ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಗ್ರಾಮಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು. ಸಭೆ ನಿಗದಿಗೊಳಿಸುವ ಮೊದಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ಮುಖ್ಯಾಧ್ಯಾಪಕರ ಮೂಲಕ ಒಬ್ಬ ಶಿಕ್ಷಕರನ್ನು ಸಮನ್ವಯಾಧಿಕಾರಿಯಾಗಿ ನೇಮಕ ಮಾಡಬೇಕು. ಈ ಅಧಿಕಾರಿಯು ಮಕ್ಕಳ ಜೊತೆ ಪೂರ್ವಭಾವಿ ಚರ್ಚೆ ನಡೆಸಿ, ಗ್ರಾಮಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಮಾಹಿತಿಯನ್ನು ಗ್ರಾಮ ಪಂಚಾಯಿತಿಗೆ ನೀಡಬೇಕು.
ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಕಾರ್ಯದರ್ಶಿಗಳು, ನೋಡಲ್ ಅಧಿಕಾರಿಗಳು ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಕಾರ್ಯಸೂಚಿ ಸಿದ್ಧಪಡಿಸಿ, ಎಲ್ಲ ಶಾಲೆಗಳಿಗೆ ಹಾಗೂ ಮಕ್ಕಳ ಒಳಿತಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ–ಸಂಸ್ಥೆಗಳಿಗೆ ಕಳುಹಿಸಬೇಕು.
ಮಕ್ಕಳ ಗ್ರಾಮಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ ನೋಡಲ್ ಅಧಿಕಾರಿಗಳು ಒಂದು ವಾರದೊಳಗಾಗಿ ಕ್ರಮ ಕೈಗೊಳ್ಳಬೇಕು. ನಂತರ ಮತ್ತೊಮ್ಮೆ ಮಕ್ಕಳ ಗ್ರಾಮಸಭೆ ನಡೆಸಿ, ಅನುಪಾಲನಾ ವರದಿ ಮಂಡಿಸಬೇಕು ಎಂದು ಸರ್ಕಾರದ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಶುರುವಾಗಿಯೇ ಇಲ್ಲ: ಮಕ್ಕಳ ಗ್ರಾಮಸಭೆಗಳನ್ನು ನಡೆಸಲು ಸಾಕಷ್ಟು ಪೂರ್ವ ತಯಾರಿ ನಡೆಸುವುದು ಅವಶ್ಯಕವಾಗಿದೆ. ನವೆಂಬರ್ ಮತ್ತು ಡಿಸೆಂಬರ್ ಒಳಗಾಗಿ ಈ ಗ್ರಾಮ ಸಭೆಗಳನ್ನು ಪೂರ್ಣಗೊಳಿಸಬೇಕು. ಆದರೆ ಯಾದಗಿರಿ ಜಿಲ್ಲೆಯಲ್ಲಿ ಮಾತ್ರ ಮಕ್ಕಳ ಗ್ರಾಮಸಭೆಗಳು ಇನ್ನೂ ಆರಂಭವಾಗಿಯೇ ಇಲ್ಲ. ಡಿಸೆಂಬರ್ ತಿಂಗಳು ಆರಂಭಗೊಂಡಿದ್ದರೂ, ಜಿಲ್ಲೆಯ ಯಾವ ಪಂಚಾಯಿತಿಯಲ್ಲೂ ಮಕ್ಕಳ ಗ್ರಾಮಸಭೆ ಇನ್ನೂ ನಡೆದೇ ಇಲ್ಲ.
ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳ ಗ್ರಾಮಸಭೆಗಳು ನಡೆಯುತ್ತಿಲ್ಲ. ಜಿಲ್ಲೆಯಲ್ಲಿ 117 ಗ್ರಾಮ ಪಂಚಾಯಿತಿಗಳಿದ್ದು, ಒಂದು ದಿನಕ್ಕೆ ಎರಡು ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಿದರೂ, ಡಿಸೆಂಬರ್ ಅಂತ್ಯದೊಳಗೆ ಎಲ್ಲ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮಸಭೆಗಳು ಪೂರ್ಣವಾಗುವುದಿಲ್ಲ. ಇದರಿಂದಾಗಿ ಮಕ್ಕಳಿಗಾಗಿಯೇ ಇರುವ ಗ್ರಾಮಸಭೆಗಳಿಂದ ಮಕ್ಕಳು ವಂಚಿತರಾಗುತ್ತಾರೆ ಎಂದು ಕಿರಣ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಿದ್ದಪ್ಪ ಲಿಂಗೇರಿ ಹೇಳುತ್ತಾರೆ.
ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯನ್ನು ನವೆಂಬರ್ ತಿಂಗಳಲ್ಲಿ ಕಡ್ಡಾಯವಾಗಿ ನಡೆಸಬೇಕು ಎಂಬ ಆದೇಶವಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸಭೆಗಳನ್ನು ನಡೆಸುತ್ತಿಲ್ಲ.
ಇದರಿಂದ ಅನೇಕ ಮಕ್ಕಳು ತಮ್ಮ ಹಕ್ಕುಗಳಿಂದ ವಂಚಿತರಾಗಿ, ಶಾಲೆ ಬಿಟ್ಟು, ಬಾಲಕಾರ್ಮಿಕ ಪದ್ಧತಿ, ಜೀತ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸುತ್ತಾರೆ.
‘ಮಕ್ಕಳ ಗ್ರಾಮಸಭೆ: ಅಧಿಕಾರಿಗಳಿಗೆ ಸೂಚನೆ’
ಪ್ರತಿ ವರ್ಷ ನವೆಂಬರ್–ಡಿಸೆಂಬರ್ನಲ್ಲಿ ಮಕ್ಕಳ ಗ್ರಾಮಸಭೆಗಳನ್ನು ನಡೆಸಬೇಕು. ಈ ಬಗ್ಗೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಲಾಗಿದೆ.
ಮಕ್ಕಳ ಗ್ರಾಮಸಭೆಗಳನ್ನು ನಡೆಸಲು ಈ ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸದ್ಯಕ್ಕೆ ಗ್ರಾಮೀಣ ಉದ್ಯೋಗ ಖಾತರಿ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಗ್ರಾಮಸಭೆಗಳು ನಡೆಯುತ್ತಿದ್ದು, ಈ ಸಭೆಗಳ ಜೊತೆಯಲ್ಲಿ ಮಕ್ಕಳ ಗ್ರಾಮ ಸಭೆಗಳನ್ನೂ ನಡೆಸಲು ತಿಳಿಸಲಾಗಿದೆ.
– ಮಹ್ಮದ್ ಯುಸೂಫ್, ಉಪಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.