ರಾಮನಗರ: `ಕೋಮಾ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರಕ್ಕೆ ಯಾವಾಗ ಆಮ್ಲಜನಕ ಕೊಡಬೇಕು, ತೆಗೆಯಬೇಕು ಎಂಬುದನ್ನು ಪಕ್ಷದ ಮುಖಂಡರ ಜತೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಕೆಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ರಾಮನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, `ನಾವೀಗ ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿದ್ದೇವೆ. ಯಾವಾಗ ಏನು ಮಾಡಬೇಕು ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ' ಎಂದು ಪ್ರತಿಕ್ರಿಯಿಸಿದರು.
'ನಮ್ಮ ಬೆಂಬಲಿಗರಿಂದ ಈ ಸರ್ಕಾರ ನಡೆಯುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ನಾವಿದ್ದೇವೆ ಎಂಬುದನ್ನು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒಪ್ಪಿಕೊಳ್ಳಲು ಸಿದ್ಧ ಇಲ್ಲ ಎಂದ ಮೇಲೆ ಅವರು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಮುಂದಾಗಬೇಕು' ಎಂದು ಸವಾಲು ಹಾಕಿದರು.
`ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಬಹುಮತ ಪಡೆದು ಅಧಿಕಾರ ರಚಿಸುತ್ತೇವೆ' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.