ಬಾಗೇಪಲ್ಲಿ: ರಕ್ತದಾನದಿಂದ ಕೆಂಪು ರಕ್ತಕಣಗಳಿಗೆ ಹೊಸ ಚೈತನ್ಯ ಬರುತ್ತದೆ. ಆರೋಗ್ಯದಲ್ಲಿ ಅಪಾರ ಸುಧಾರಣೆ ಕಂಡುಬರುತ್ತದೆ. ಇದರ ಬಗ್ಗೆ ವಿಶೇಷವಾಗಿ ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಿವಿಲ್ ನ್ಯಾಯಾಧೀಶ ಎನ್.ಎಂ.ರಮೇಶ್ ತಿಳಿಸಿದರು.
ಬುಧವಾರ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಾಬುರೆಡ್ಡಿ ಮಾತನಾಡಿ `ತಾಲ್ಲೂಕಿನಲ್ಲಿ ಶೇ 80ರಷ್ಟು ಕೂಲಿಕಾರ್ಮಿಕರಲ್ಲಿ ರಕ್ತಹೀನತೆ ಇದೆ. ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ನೀಡಬಹುದು. ರಕ್ತದಾನದಿಂದ ದೇಹಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.
ಮುಂದಿನ 15 ದಿನಗಳೊಳಗೆ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಆರಂಭಿಸಬೇಕಾಗಿದೆ. ಕೆಲ ತಾಂತ್ರಿಕ ದೋಷಗಳಿಂದ ತೆರೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 60 ಮಂದಿ ರಕ್ತದಾನ ಮಾಡಿದರು. ತಹಶೀಲ್ದಾರ್ ಎಂ.ಎ.ಪದ್ಮಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎ.ಜಿ.ಸುಧಾಕರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ವಕೀಲರ ಸಂಘ ತಾಲ್ಲೂಕು ಅಧ್ಯಕ್ಷ ಎ.ನಂಜುಂಡಪ್ಪ ಉಪಸ್ಥಿತರಿದ್ದರು.